West Bengal | S I R ಆತಂಕದಿಂದ ಪ್ರತಿದಿನ 3–4 ಮಂದಿ ಮೃತ್ಯು: ಮಮತಾ ಬ್ಯಾನರ್ಜಿ ಆರೋಪ

ಮಮತಾ ಬ್ಯಾನರ್ಜಿ | Photo Credit : PTI
ಕೋಲ್ಕತ್ತಾ, ಜ. 23: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಿಂದ ಉಂಟಾಗಿರುವ ಆತಂಕದ ಕಾರಣ ರಾಜ್ಯದಲ್ಲಿ ಪ್ರತಿದಿನ ಮೂರರಿಂದ ನಾಲ್ಕು ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದರು.
ಶುಕ್ರವಾರ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಕೋಲ್ಕತ್ತಾದ ರೆಡ್ ರೋಡ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಾವುಗಳಿಗೆ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ನೈತಿಕ ಹೊಣೆಗಾರಿಕೆ ವಹಿಸಬೇಕೆಂದು ಆಗ್ರಹಿಸಿದರು.
“ಇದುವರೆಗೆ 110ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿದಿನ ಮೂರರಿಂದ ನಾಲ್ಕು ಮಂದಿ ಎಸ್ಐಆರ್ ಆತಂಕದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ,” ಎಂದು ಮಮತಾ ಬ್ಯಾನರ್ಜಿ ಹೇಳಿದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಮತದಾರರ ಪಟ್ಟಿಯ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ.
ಪಶ್ಚಿಮ ಬಂಗಾಳದ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ದೇಶದ ಮಹನೀಯರಾದ ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್, ಸುಭಾಷ್ ಚಂದ್ರ ಬೋಸ್ ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಅವಮಾನ ನಡೆಯುತ್ತಿದೆ ಎಂದೂ ದೂರಿದರು.
ಎಸ್ಐಆರ್ ಪ್ರಕ್ರಿಯೆ ಜನರಲ್ಲಿ ಭೀತಿ ಹಾಗೂ ಗೊಂದಲವನ್ನುಂಟು ಮಾಡಿದ್ದು, ಇದು ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.







