ಸುರತ್ಕಲ್-ಬಿ.ಸಿ.ರೋಡ್ ಮಧ್ಯೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ: ಸಂಸದ ಬ್ರಿಜೇಶ್ ಚೌಟ
ರಾ.ಹೆ.ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ
ಮಂಗಳೂರು, ಸೆ.11: ರಾಷ್ಟ್ರೀಯ ಹೆದ್ದಾರಿಯ ಸುರತ್ಕಲ್-ಬಿ.ಸಿ.ರೋಡು ನಡುವಿನ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದಿಂದ ಅನುಮೋದನೆ ಸಿಕ್ಕಿದೆ. ಅದಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ (ಡಿಪಿಆರ್) ಸಿದ್ದಗೊಳಿಸಲಾ ಗುತ್ತಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಸುರತ್ಕಲ್-ಬಿ.ಸಿ.ರೋಡು ಹೆದ್ದಾರಿ ಸಮಸ್ಯೆಯಿಂದ ಕೂಡಿದೆ. ಅವುಗಳ ನಿವಾರಣೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಘಟಿತವಾಗಿ ಕೆಲಸ ಮಾಡಬೇಕು. ಬ್ಲ್ಯಾಕ್ ಸ್ಪಾಟ್ಗಳನ್ನು ಗುರುತಿಸಿ, ಸರ್ವಿಸ್ ರಸ್ತೆ, ಚರಂಡಿ ವ್ಯವಸ್ಥೆಗಳ ಬಗ್ಗೆ ಮೂರು ಇಲಾಖೆಗಳು ಚರ್ಚೆ ನಡೆಸಿ ಸಮರ್ಪ ಕವಾಗಿ ಯೋಜನಾ ವರದಿ ಸಿದ್ಧಪಡಿಸಬೇಕು. ಅಗತ್ಯ ಇರುವಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ, ಜಂಕ್ಷನ್ಗಳ ಅಭಿವೃದ್ಧಿ, ಹೆದ್ದಾರಿ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ವಹಿಸಬೇಕು. ಹೆದ್ದಾರಿ ಪ್ರಾಧಿಕಾರ ತ್ವರಿತಗತಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮವಹಿಸಬೇಕು ಎಂದರು.
ಸುರತ್ಕಲ್ನಿಂದ ಬಿ.ಸಿ.ರೋಡ್ವರೆಗೆ ಹಾಲಿ ಇರುವ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವುದರೊಂದಿಗೆ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಚಿವರಿಗೆ ಮನವಿ ಮಾಡಲಾಗಿದೆ. ಅದಕ್ಕೂ ಕೂಡ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ರಸ್ತೆ ಅಭಿವೃದ್ಧಿಗೆ ಸಂಬಂಧಿಸಿ ಡಿಪಿಆರ್ ಸಿದ್ಧಪಡಿಸಲಾಗಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.
ಹಲವು ವರ್ಷಗಳಿಂದ ಹೆದ್ದಾರಿ ದುರಸ್ತಿಗೊಳಿಸಿದರೂ ಹೆದ್ದಾರಿಯಲ್ಲಿ ಹೊಂಡಗಳು ನಿರ್ಮಾಣವಾಗುತ್ತಿವೆ. ಅದಕ್ಕೆ ಪರಿಹಾರವಾಗಿ ಕಾಂಕ್ರಿಟ್ ರಸ್ತೆ ನಿರ್ಮಿಸುವ ಅಗತ್ಯವಿದೆ. ಮೊದಲು ಸರ್ವಿಸ್ ರಸ್ತೆ ನಿರ್ಮಿಸಿ ವಾಹನ ಸಂಚಾರಕ್ಕೆ ಪರ್ಯಾಯ ಕ್ರಮ ಕೈಗೊಂಡ ಬಳಿಕ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ನಂತೂರು ಬಳಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಅ.15ಕ್ಕೆ ಗಡುವು ನೀಡಲಾಗಿದೆ. ಅದಕ್ಕೆ ತಪ್ಪಿದಲ್ಲಿ ಟೆಂಡರ್ ಬದಲಾಯಿಸುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಕಾರದ ಯೋಜನಾ ನಿರ್ದೇಶಕ ಜಾವೇದ್ ಅಝ್ಮಿ ತಿಳಿಸಿದ್ದಾರೆ.
ನಗರದೊಳಗಿನ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯವನ್ನು ಕೂಡ ಪಾಲಿಕೆ ತಕ್ಷಣ ಮುಂದಾಗಬೇಕು. ನವರಾತ್ರಿ ಸಂದರ್ಭ ದಸರಾ ಮೆರವಣಿಗೆ ನಡೆಯುವ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಪಂಪ್ವೆಲ್-ಕರಾವಳಿ ವೃತ್ತ ರಸ್ತೆ ಕೂಡ ಸಂಪೂರ್ಣವಾಗಿ ಹದಗೆಟ್ಟಿದೆ. 3 ವರ್ಷದ ಹಿಂದೆ ಟೆಂಡರ್ ಆಗಿದೆ. ಹಾಗಾಗಿ ಇದನ್ನು ಆದ್ಯತೆಯ ಮೇರೆಗೆ ದುರಸ್ತಿಗೊಳಿಸಬೇಕಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಶಾಸಕ ಭರತ್ ಶೆಟ್ಟಿ, ಸಂಚಾರ ಉಪ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಗಳಾದ ಶಿವಕುಮಾರ್ ಮುಗ್ಗಳ್ಳಿ, ಕೃಷ್ಣಾನಂದ, ಮನಪಾ ಇಂಜಿನಿಯರ್ ನರೇಶ್ ಶೆಣೈ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.
ಹೆದ್ದಾರಿ ಬದಿ ಅಂಗಡಿಗಳಿರುವ ಕಾರಣ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಏಕಾಏಕಿ ವಾಹನ ನಿಲ್ಲಿ ಸುವ ಕಾರಣದಿಂದ ಅಪಘಾತಗಳಾಗುತ್ತವೆ. ಹಾಗಾಗಿ ಹೆದ್ದಾರಿ ಬದಿಯಲ್ಲಿರುವ ಅಂಗಡಿಗಳನ್ನು ಸರ್ವೇ ನಡೆಸ ಬೇಕು. ನಿಯಮ ಮೀರಿದ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಸಂಸದ ಬ್ರಿಜೇಶ್ ಚೌಟ ಸೂಚಿಸಿದರು.