ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿಕೆಶಿ ಭೇಟಿ
ಮಂಗಳೂರು, ಅ.2: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವರಾ ರಾತ್ರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ದೇವರ ಬಲಿ ಉತ್ಸವದ ಶುಭ ಸಂದರ್ಭ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿ ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ಬಳಿಕ ಮಾತನಾಡಿದ ಅವರು, ನಾನು ಇಂದು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಶಾರದಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಂತಿದೆ. ನಾರಾಯಣ ಗುರುಗಳು ಸ್ಥಾಪಿಸಿದ ಈ ಕ್ಷೇತ್ರಕ್ಕೆ ಭೇಟಿ ನೀಡಿರುವುದು ನನ್ನ ಸೌಭಾಗ್ಯ ಮಂಗಳೂರು ದಸರಾ ವೈಭವ ಕಂಡು ಬಹಳ ಸಂತೋಷವಾಯಿತು ಎಂದರು.
ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಸ್ವಾಗತಿಸಿದರು. ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಪಿ.ಕೆ.ಗೌರವಿ, ದೀಪಕ್ ಪೂಜಾರಿ, ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಂ, ಇನಾಯತ್ ಆಲಿ, ಶ್ರೀನಿವಾಸ್ ಬಿ.ವಿ., ಮತ್ತಿತರರು ಉಪಸ್ಥಿತರಿದ್ದರು.