ಜ.31ರಂದು ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’
ಮಂಗಳೂರು, ಜ.28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ, ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 31ರಂದು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ -ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ, ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಎಸ್ ನೆರವೇರಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕ್ಷೇಮವನ, ಬೆಂಗಳೂರು ಇದರ ಕಾರ್ಯನಿರ್ವಹಕ ನಿರ್ದೇಶಕಿ ಶ್ರದ್ಧಾ ಅಮಿತ್ ವಿಶೇಷ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ .ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.