ಸೆ.6ರಂದು ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಮಂಗಳೂರು , ಸೆ.2: ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೆ. 6ರಂದು ಅಪರಾಹ್ನ 3.00 ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಲಿದೆ.
2024-2025ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಯ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಈ ಸಮಾರಂಭದಲ್ಲಿ ನಡೆಯಲಿದೆ.
ಗೌರವ ಪುರಸ್ಕಾರ : ಈ ಸಮಾರಂಭದಲ್ಲಿ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಗೈದ ಉಡುಪಿ ತಾಲೂಕಿನ ನೃತ್ಯ ವಿದುಷಿ ದೀಕ್ಷಾ ವಿ. ಹಾಗೂ ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜ್ ನ ವಿದ್ಯಾರ್ಥಿನಿ ರೆಮೋನಾ ಇವೆಟ್ ಪಿರೇರಾ ಇವರಿಗೆ ಬ್ಯಾಂಕ್ ವತಿಯಿಂದ ಗೌರವ ಪುರಸ್ಕಾರ ಸನ್ಮಾನ ನಡೆಯಲಿದೆ.
ಕರ್ನಾಟಕ ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಇವರು ಗೌರವ ಪುರಸ್ಕಾರ ಹಾಗೂ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ, ಉತ್ತಮ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದು ಬ್ಯಾಂಕಿನ ಪ್ರಕಟನೆ ತಿಳಿಸಿದೆ.