×
Ad

ಸಹಕಾರ ರತ್ನ ರಾಜೇಂದ್ರ ಕುಮಾರ್‌ಗೆ ‘ನಮ್ಮ ಕುಡ್ಲ ಸಾಧಕ ಪ್ರಶಸ್ತಿ’ ಪ್ರದಾನ

Update: 2025-11-10 19:50 IST

ಮಂಗಳೂರು,ನ.10: ಜಿಲ್ಲೆಯ ಪ್ರಥಮ ತುಳು ವಾರ್ತಾ ವಾಹಿನಿ ’ ನಮ್ಮ ಕುಡ್ಲ ‘ ದೀಪಾವಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡ ಗೂಡುದೀಪ ಪಂಥ -2025ರ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ’ ನಮ್ಮ ಕುಡ್ಲ ಸಾಧಕ ಪ್ರಶಸ್ತಿ’ ಯನ್ನು ನೀಡಿದ್ದು , ಈ ಪ್ರತಿಷ್ಠಿತ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ ಎಂ.ಎನ್ ರಾಜೇಂದ್ರಕುಮಾರ್ ಅವರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ ಸೋಮವಾರ ಪ್ರದಾನ ಮಾಡಲಾಯಿತು.

ಕರಾವಳಿ ಕರ್ನಾಟಕದ ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಡಾ.ಎಂ.ರಾಜೇಂದ್ರ ಕುಮಾರ್ ಅವರು ಸಹಕಾರ ರಂಗದಲ್ಲಿ ಕಳೆದ 45 ವರ್ಷಗಳಿಂದ ವಿವಿಧ ಸಹಕಾರಿ ಸಂಘ, ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ್ನು 31 ವರ್ಷಗಳಿಂದ ಮುನ್ನಡೆಸುತ್ತಿದ್ದಾರೆ . ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ 113 ಶಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದೆ. ರಾಜೇಂದ್ರ ಕುಮಾರ್ ಅವರ ದಕ್ಷ ನಾಯಕತ್ವದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿಗೆ 23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 19 ಬಾರಿ ನಬಾರ್ಡ್ ಪ್ರಶಸ್ತಿ ಸೇರಿದಂತೆ ಹಲವಾರು ಉನ್ನತ ಪ್ರಶಸ್ತಿಗಳು ಲಭಿಸಿವೆ.

‘ ನಮ್ಮ ಕುಡ್ಲ ಸಾಧಕ ಪ್ರಶಸ್ತಿ’ ಯನ್ನು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ನಮ್ಮ ಕುಡ್ಲ ವಾರ್ತಾ ವಾಹಿನಿಯ ಮುಖ್ಯಸ್ಥರಾದ ಲೀಲಾಕ್ಷ ಕರ್ಕೇರ ಅವರು ತಮ್ಮ ಬಳಗದ ಜೊತೆಯಲ್ಲಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಉದ್ಯಮಿಗಳಾದ ಲಕ್ಷ್ಮೀಶ ಭಂಡಾರಿ , ಜಯಪ್ರಕಾಶ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News