ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಬೇಡಿಕೆ : ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರನ್ನು ಭೇಟಿಯಾದ ವಕೀಲರ ನಿಯೋಗ
ಮಂಗಳೂರು, ಡಿ.6: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಉಡುಪಿ ಸರ್ಕ್ಯೂಟ್ ಹೌಸ್ನಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಿದೆ.
ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ವಿಧಾನ ಪರಿಷತ್ ನ ಸದಸ್ಯರಾದ ಐವನ್ ಡಿಸೋಜ ರವರು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಮನವಿಯನ್ನು ಸಲ್ಲಿಸಿದರು.
ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಕಾರ್ಯ ಬಹಳ ಮುಖ್ಯವಾಗಿದೆ. ಈದೀಗ ಸಾಮಾನ್ಯ ಜನರು ದೂರದ ಬೆಂಗಳೂರಿಗೆ ಹೋಗಿ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳಲು ಬಹಳ ಕಷ್ಟವಾಗಿದ್ದು, ಹಾಗೂ ಮಳೆಗಾಲದ ಸಂದರ್ಭದಲ್ಲಿ ದೂರದ ಬೆಂಗಳೂರಿನ ಸಂಪರ್ಕ ಆಗಾಗ ಕಡಿತಗೊಳ್ಳುವುದರಿಂದ ಜನರು ಹೈಕೋರ್ಟಿಗೆ ಸಂಚರಿಸಲು ಕಷ್ಟವನ್ನು ಅನುಭವಿಸಬೇಕಾಗಿದೆ. ಅಲ್ಲದೆ ಕರಾವಳಿ ಭಾಗ ಉಡುಪಿ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ಈ ಭಾಗದ ಜನರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿಗಳಿಗೆ ವಿವರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವನ್ನು ತೋರಿಸಿರುವುದರಿಂದ, ಮೊದಲಿಗೆ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸಲು ಒಪ್ಪಿಗೆ ನೀಡಬೇಕೆಂದು ವಿನಂತಿಸಿದರು.
ಈ ಮನವಿಗೆ ಪೂರಕವಾಗಿ ಸ್ಪಂದಿಸಿದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ತಮ್ಮ ಮನವೀಯ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಮಿತಿಯ ನಿಯೋಗದಲ್ಲಿ ಮಂಗಳೂರು ವಕೀಲ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ. ಮಂಗಳೂರಿನ ಪ್ರಧಾನ ಜಿಲ್ಲಾ ಸರಕಾರಿ ವಕೀಲ ಎಂ ಪಿ ನರೋನ್ಹ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ್ ವಿ. ಶೆಟ್ಟಿಗಾರ್, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.