ದ.ಕ.ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ : ಭರತ್ ಮುಂಡೋಡಿ
ಮಂಗಳೂರು,ಡಿ.10: ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಆಗಿ ಬದಲಾಯಿಸುವ ಪ್ರಕ್ರಿಯೆಯನ್ನು ಸಮಗ್ರವಾಗಿ ಪರಿಶೀಲನೆ ಮಾಡಲು ಸರಕಾರದ ಆದೇಶವಿದೆ. ಇದನ್ನು ಆಹಾರ ಇಲಾಖೆಯ ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ದ.ಕ.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದ್ದಾರೆ.
ದ.ಕ.ಜಿಪಂ ಕಚೇರಿಯಲ್ಲಿ ಬುಧವಾರ ನಡೆದ ದ.ಕ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿ.23ರಂದು ದ.ಕ.ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುವುದು ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಮಂಗಳೂರಿನಿಂದ ಉಡುಪಿ ಹಾಗೂ ಕುಂದಾಪುರ ಕಡೆಗೆ ಕಾರ್ಯಾಚರಣೆಯಲ್ಲಿರುವ ನಿಗಮದ ಸಾರಿಗೆಗಳಿಗೆ ಮುಲ್ಕಿಯಲ್ಲಿ ನಿಲುಗಡೆ ನೀಡಿ ಪ್ರಯಾಣಿಕರನ್ನು ಹತ್ತಿಸಿ ಅಥವಾ ಇಳಿಸಲು ಕ್ರಮ ಕೈಗೊಳ್ಳುವಂತೆ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಭರತ್ ಮುಂಡೋಡಿ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕೆಲವು ಕಡೆಗಳಲ್ಲಿ ಸಿಸಿ ಬಸ್ಸುಗಳು ಕಾರ್ಯಾಚರಿಸುತ್ತಿರುವ ಬಗ್ಗೆ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷರು ವಿಷಯ ಪ್ರಸ್ತಾಪಿಸಿದರು. ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕ್ರಮವಹಿಸಲು ಭರತ್ ಮುಂಡೋಡಿ ಸೂಚಿಸಿದರು.
ಸುಳ್ಯ-ತೊಡಿಕಾನ ಮಾರ್ಗದ ಸಾರಿಗೆ ಕಾರ್ಯಾಚರಣೆಗೆ ಪರವಾನಗಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪರವಾನಗಿ ಮಂಜೂರಾದ ಬಳಿಕ ನಿಗಮದ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಯುವ ನಿಧಿ ಪ್ಲಸ್ ಯೋಜನೆಯಡಿ ಕೌಶಲಾಭಿವೃದ್ಧಿ ತರಬೇತಿ ಪಡೆಯಲು ಅಭ್ಯರ್ಥಿಗಳ ಮನವೊಲಿಸುವ ಜೊತೆಗೆ ಫಲಾನುಭವಿಗಳಿಗೆ ಸಲಹೆಗಳನ್ನು ನೀಡಬೇಕು ಎಂದು ತಿಳಿಸಿದರು.
ಆಹಾರ ಕಿಟ್ ವಿತರಣೆಗಾಗಿ ಸರಕಾರವು ಅನುಮೋದನೆ ನೀಡಿದೆ. ಟೆಂಡರ್ ಪ್ರಕ್ರಿಯೆ ಆದ ತಕ್ಷಣ ವಿತರಣೆ ಮಾಡುವುದಾಗಿ ಮಾಹಿತಿ ಲಭ್ಯವಿರುವುದಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.
ಜಿಲ್ಲೆಯ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಕಾರ್ಯಾಗಾರಕ್ಕೆ ಹಾಜರಾದ ಯುವನಿಧಿ ಫಲಾನುಭವಿಗಳಿಗೆ ಜಾಬ್ ರೋಲ್ ಗಳ ಬಗ್ಗೆ ಮಾಹಿತಿ ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯಡಿ ನ.20ರಿಂದ ಡಿ.8ರವರೆಗೆ 467 ಫಲಾನುಭವಿಗಳ ಸಹಿತ ಈವರೆಗೆ 3,80,116 ಫಲಾನುಭವಿಗಳು ಈ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದರು.
ಸಭೆಯಲ್ಲಿ ದ.ಕ. ಜಿಪಂ ಸಿಇಒ ನರ್ವಾಡೆ ನಾಯಕ್ ಕಾರ್ಬಾರಿ, ಜಿಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ, ಜಿಪಂ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷ್ಮಾ ಕೆ.ಎಸ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಜೋಕಿಂ ಡಿಸೋಜ, ಸುರೇಖಾ ಚಂದ್ರಹಾಸ್, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿಎ, ಶಾಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಸುರೇಂದ್ರ ಕಂಬಳಿ, ಎಸ್. ರಫೀಕ್, ಸುಧೀರ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.