ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಪರೀಕ್ಷೆಗೆ ದ.ಕ. ಜಿ.ಪಂ ಸಿಇಒ ಸೂಚನೆ
ಮಂಗಳೂರು: ದ.ಕ. ಜಿಲ್ಲೆಯ ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶ ಗಳಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಪರೀಕ್ಷೆಯನ್ನು ನಡೆಸಬೇಕು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.
ಅವರು ಗುರುವಾರ ದ.ಕ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಕಲುಷಿತ ನೀರು ಪೂರೈಕೆಯಾದರೆ, ತಕ್ಷಣ ಸಮಸ್ಯೆಯನ್ನು ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಗ್ರಾಮ ಪಂಚಾಯತ್ ಪಿ.ಡಿ.ಒ ಗಳಿಗೆ ನಿರ್ದೇಶನ ನೀಡಬೇಕು ಎಂದರು.
ಅಶುದ್ಧ ನೀರಿನ ಪೂರೈಕೆ ಬಗ್ಗೆ ದೂರುಗಳು ಬಂದಲ್ಲಿ ಅಥವಾ ನಿರ್ಲಕ್ಷ್ಯ ವಹಿಸಿದರೆ ಪಿಡಿಒಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದರು. ಜಲಜೀವನ್ ಮಿಷನ್ ಕಾಮಗಾರಿ ಪ್ರಗತಿ ಪರಿಶೀಲಿಸಿ, ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಪ್ರತಿ ತಿಂಗಳು ನಡೆಸಬೇಕು. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್ಗಳನ್ನು ಶುಚಿಗೊಳಿಸಬೇಕು. ಪ್ರತಿಯೊಂದು ಕುಡಿಯುವ ನೀರಿನ ಮೂಲಗಳಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿಸಬೇಕು ಎಂದು ಸಿಇಒ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.