ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ: ಸಾಧಕರಿಗೆ ಸನ್ಮಾನ
ಮಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖಾ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಒತ್ತಡ ನಿರ್ವಹಣೆ ಬಗ್ಗೆ ಸರಕಾರಿ ನೌಕರರಿಗೆ ಕಾರ್ಯಾಗಾರ ನಗರದ ನಂದಿನಿ ಸಭಾಂಗಣದಲ್ಲಿ ಮಂಗಳವಾರ ಜರಗಿತು.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಡಾ. ನೆಲ್ಕುದ್ರಿ ಸದಾನಂದ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗರಿಷ್ಠ ಅಂಕಗಳನ್ನು ಗಳಿಸಿರುವ ಸರಕಾರಿ ನೌಕರರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಸಂತಸದ ವಿಷಯ.ಮುಂದೆ ಇದೆ ರೀತಿ ಮಕ್ಕಳು ಉತ್ತಮ ಸಂಸ್ಕಾರವನ್ನು ಕಲಿತು ಉತ್ತಮ ಪ್ರಜೆಗಳಾಗಬೇಕು.ನೈತಿಕವಾಗಿ ಕುಟುಂಬದ ಜೊತೆಗೆ ಬೆರೆತು ಎಲ್ಲರೊಂದಿಗೂ ಹೊಂದಿಕೊಂಡು ಹೋಗಬೇಕು. ಸಮಾಜದಲ್ಲಿ ಸತ್ಪ್ರಜೆಗಳಾಗಬೇಕು ಎಂದು ಕಿವಿ ಮಾತು ಹೇಳಿದರು.
ಸಮಾರಂಭದಲ್ಲಿ ಎಸ್ಸೆಸಿಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದ ಸರಕಾರಿ ನೌಕರರನ್ನು ಅಭಿನಂದಿಸಲಾಯಿತು.
ಸಮಾರಂಭದಲ್ಲಿ ರಾಜ್ಯಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್.ಟಿ, ರಾಜ್ಯ ಉಪಾಧ್ಯಕ್ಷ ಸಿದ್ದೇಶ್, ದ.ಕ.ಜಿಲ್ಲಾ ಅಧ್ಯಕ್ಷ ಎಚ್.ಗಣೇಶ್ ರಾವ್, ಮಾಜಿ ಅಧ್ಯಕ್ಷ ಪಿ.ಕೆ. ಕೃಷ್ಣ , ಖಜಾಂಚಿ ನವೀನ್ ಕುಮಾರ್ ಎಂ ಎಸ್, ಮತ್ತು ತಾಲೂಕು ಅಧ್ಯಕ್ಷರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಮೊದಲು ಸರಕಾರಿ ನೌಕರರಿಗೆ ಒತ್ತಡ ನಿರ್ವಹಣೆ ಬಗ್ಗೆ ಡಾ.ಬಿಂದು ಉದಯಕುಮಾರ್ ಅವರಿಂದ ಕಾರ್ಯಗಾರ ನಡೆಯಿತು.