ಕೊನೆಯ ಪೆಡ್ಲರ್ ಹಿಡಿಯುವವರೆಗೆ ಡ್ರಗ್ಸ್ ಮುಕ್ತ ಕಾರ್ಯಾಚರಣೆ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುವಿನ ಪೆಡ್ಲರ್ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಡ್ರಗ್ಸ್, ಮಾದಕ ವಸ್ತುಗಳ ಜಾಗೃತಿ ಪ್ರಯುಕ್ತ ನಗರದ ಪುರಭವನದಲ್ಲಿ ಮಂಗಳವಾರ ನಡೆದ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಡ್ರಗ್ಸ್ ವಿತರಣಾ ಜಾಲವನ್ನು ನಿಲ್ಲಿಸಲು ಪೊಲೀಸ್ ಇಲಾಖೆಯು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ತಪಾಸಣೆಯಲ್ಲಿ ಯಾವುದೇ ಡ್ರಗ್ಸ್ ಪಾಸಿಟಿವ್ ಕಂಡು ಬಂದಿಲ್ಲ. ಇದರಿಂದ ನಶಮುಕ್ತ ಮಂಗಳೂರು ಅಭಿಯಾನವು ಸಂಪೂರ್ಣ ಯಶಸ್ವಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.
ಎಲ್ಲಾ ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ಕ್ರಿಯಾಶೀಲಗೊಳಿಸಬೇಕು. ಮಾದಕ ವಸ್ತುಗಳ ಪ್ರಭಾವ ಕ್ಕೊಳಗಾದ ಸಂಶಯಾಸ್ಪದ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಕೌನ್ಸೆಲಿಂಗ್ ಮೂಲಕ ಹೊರತರಬೇಕು. ಈ ನಿಟ್ಟಿನಲ್ಲಿ ಅಗತ್ಯ ನೆರವನ್ನು ಪೊಲೀಸ್ ಇಲಾಖೆ ನೀಡಲಿದೆ ಎಂದು ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.
ಶಿಕ್ಷಣ ಸಂಸ್ಥೆಗಳ ಕ್ಯಾಂಪಸನ್ನು ಶುದ್ಧಗೊಳಿಸುವ ಇಂತಹ ಚಟಗಳಿಂದ ಮುಕ್ತ ಮಾಡುವ ಈ ಅಭಿಯಾನದಲ್ಲಿ ಕಾಲೇಜುಗಳು ಕೈ ಜೋಡಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಆಗಾಗ ಭೇಟಿ ನೀಡಲಿದ್ದಾರೆ. ಡ್ರಗ್ಸ್ ಪ್ರಭಾವಿತ ವಿದ್ಯಾರ್ಥಿಗಳನ್ನು ಸಂತ್ರಸ್ತರೆಂದು ಪರಿಗಣಿಸಲಾಗುವುದು. ಆದರೆ ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಪೋಲಿಸ್ ಆಯುಕ್ತರು ತಿಳಿಸಿದರು.
ಮಂಗಳೂರಿನಲ್ಲಿ ಡ್ರಗ್ಸ್ ವ್ಯಾಪಕವಾಗಿದೆ ಎಂದು ಕೇಳಿ ಬರುತ್ತಿದೆ. ಆದರೆ 2025ರ ಜೂನ್ 1ರಿಂದ 2026ರ ಜನವರಿ 17ರವರೆಗೆ ವಿವಿಧ ಕಾಲೇಜುಗಳಲ್ಲಿ 5,356 ಡ್ರಗ್ಸ್ ಪರೀಕ್ಷೆಗಳನ್ನು ಮಾಡಲಾಗಿದೆ. ಇದರಲ್ಲಿ ಕೇವಲ 14 ಪ್ರಕರಣಗಳು ಕಂಡು ಬಂದಿದೆ. ಇದು ಜಿಲ್ಲೆಯಲ್ಲಿ ಡ್ರಗ್ಸ್ ಚಟುವಟಿಕೆ ಕಡಿಮೆಯಾಗಿರುವ ಸಂಕೇತವಾಗಿದೆ ಎಂದು ಹೇಳಿದರು.
*ಪಿಜಿಗಳಿಗೆ ಪೊಲೀಸ್ ಎನ್ಒಸಿ : ನಗರದ ಪೇಯಿಂಗ್ ಗೆಸ್ಟ್ (ಪಿಜಿ)ಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಪಿಜಿಗಳಿಗೆ ಲೈಸೆನ್ಸ್ ನೀಡುವ ಮೊದಲು ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣ ಪತ್ರ ಪಡೆಯುವ ಬಗ್ಗೆ ಪರಿಶೀಲಿಸುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದರು.
ಸಭೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕುಮಾರ್, ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಎಎಸ್ಪಿ ಅನಿಲ್ ಕುಮಾರ್ ಮತ್ತಿತರಿದ್ದರು.