×
Ad

ಮತಾಂಧತೆ, ಭ್ರಮೆಯಿಂದ ಹೊರಬನ್ನಿ: ಯುವಜನತೆಗೆ ನ್ಯಾ.ನಾಗಮೋಹನ್ ದಾಸ್ ಕರೆ

Update: 2024-02-25 13:03 IST

ಮಂಗಳೂರು, ಫೆ.25: ದೇಶದಲ್ಲಿ ಹಿಂದೆಂದೂ ಕಾಣದ ನಿರುದ್ಯೋಗ, ಅಸಮಾನತೆಯ ಹಲವು ಸಮಸ್ಯೆಗಳ ನಡುವೆ ಯುವ ಜನತೆ ಮತಾಂಧತೆ, ಭ್ರಮೆಯ ಸುಳಿಯಲ್ಲಿ ಸಿಲುಕಿ ನರಳುತ್ತಿದೆ. ಅದರಿಂದ ಅವರನ್ನು ಹೊರ ತರುವಲ್ಲಿ ಗ್ರಾಮಗಳಿಂದ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಭಿಪ್ರಾಯಿಸಿದ್ದಾರೆ.

'ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ' ಎಂಬ ಘೋಷ ವಾಕ್ಯದೊಂದಿಗೆ ನಡೆಯಲಿರುವ ಮೂರು ದಿನಗಳ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನಕ್ಕೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿಯ ಯುನಿಟಿ ಸಭಾಂಗಣದಲ್ಲಿ ರವಿವಾರ ಬೆಳಗ್ಗೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಪ್ರಸಕ್ತ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಸಮಾನ ಹಾಗೂ ಗುಣಮಟ್ಟದ ಶಿಕ್ಷಣ, ನೀತಿ ಜೊತೆಗೆ ಯುವ ನೀತಿಯನ್ನು ಸರಕಾರ ಜಾರಿಗೊಳಿಸುವ ನಿಟ್ಟಿನಲ್ಲಿ ಸಮ್ಮೇಳನದಲ್ಲಿ ಚರ್ಚಿಸಿ ನಿರ್ಣಯ ಕೈ ಗೊಂಡು ಈ ಕುರಿತಾದ ಚಳವಳಿಯ ನೇತೃತ್ವವನ್ನೂ ಡಿವೈ ಎಫ್ ಐ ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ಯುನಿಟಿ ಹಾಲ್ ನ ಪ್ರೊ.ಅಮೃತ ಸೋಮೇಶ್ವರ ವೇದಿಕೆ, ಡಾ.ವಿಠಲ್ ಭಂಡಾರಿ ಸಭಾಂಗಣದಲ್ಲಿ ಕಾಂ.ನಾಗೇಶ್ ಕುಮಾರ್ ನಗರದಲ್ಲಿ ನಡೆಯುತ್ತಿರುವ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ, ವಿಶ್ರಾಂತ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಮಾತನಾಡಿ, ದೇಶದಲ್ಲಿ ಕಳೆದ ಒಂದು ದಶಕದಲ್ಲಿ ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆಯುತ್ತಿದೆ. ಆ ಮೂಲಕ ಚಾತುರ್ವರ್ಣ, ಜಾತಿ ವ್ಯವಸ್ಥೆಯನ್ನು ಮುನ್ನೆಲೆಗೆ ತರುವ ಪಿತೂರಿ ನಡೆಯುತ್ತಿದ್ದು, ಇದರ ವಿರುದ್ಧ ಗ್ರಾಮ ಮಟ್ಟದಿಂದ ಜನರಿಗೆ ಮನವರಿಕೆ ಮಾಡುವ ಚಳವಳಿ ಆಗಬೇಕು ಎಂದು ಹೇಳಿದರು.

ಮತೀಯವಾದವನ್ನು ಬಿತ್ತುವ ಶತ್ರುಗಳು ಬಲಶಾಲಿಯಾಗಿದ್ದರೂ ಅದನ್ನು ಹಿಮ್ಮೆಟ್ಟಿಸುವ ನಮ್ಮ ಪ್ರಯತ್ನ ನಿರಂತರವಾಗಿರಬೇಕು. ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ಕಾಪಾಡಬೇಕು ಎಂದು ಅವರು ಕರೆ ನೀಡಿದರು.

ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಡಿವೈಎಫ್ಐ ಕರ್ನಾಟಕ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ವಹಿಸಿದ್ದರು.

ಡಿವೈಎಫ್ಐ ಕೇಂದ್ರ ಸಮಿತಿಯ ಜೆಕ್ ಸಿ. ಥಾಮಸ್, ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್, ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ರಜೀಶ್ ವೆಲ್ಲಾಟ್, ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರೇಣುಕಾ ಕಹಾರ್, ಆಶಾ ಬೋಳೂರು, ಎಸ್ಎಫ್ಐನ ರಾಜ್ಯ ಕಾರ್ಯದರ್ಶಿ ಭೀಮನಗೌಡ, ಸ್ವಾಗತ ಸಮಿತಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್, ಕೃಷ್ಣಪ್ಪ ಕೊಂಚಾಡಿ, ಬಿ.ಕೆ. ಇಮ್ತಿಯಾಝ್, ವಕೀಲ ರಾಮಚಂದ್ರ ಬಬ್ಬುಕಟ್ಟೆ, ಡಾ.ಜೀವನ್ ರಾಜ್ ಕುತ್ತಾರ್ ಮತ್ತಿತರರು ಉಪಸ್ಥಿತರಿದ್ದರು.

ರಮೇಶ್ ಕುಮಾರ್ ಸ್ಮರಣೆಯಲ್ಲಿ ಹೋರಾಟ ಚಳವಳಿಗಳ ನೆನಪಿನ ಪೋಸ್ಟರ್ ಗ್ಯಾಲರಿಯನ್ನು ವಿಶ್ರಾಂತ ಜಿಲ್ಲಾಧಿಕಾರಿ, ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎ.ಬಿ.ಇಬ್ರಾಹೀಂ ಉದ್ಘಾಟಿಸಿದರು.

ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಸ್ವಾಗತಿಸಿದರು. ಡಿವೈಎಫ್ಐ ಮುಖಂಡರಾದ ಮನೋಜ್ ವಾಮಂಜೂರು ಕಾರ್ಯಕ್ರಮ ನಿರ್ವಹಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News