ಮಂಗಳೂರು | ಶಾರದಾ ವಿದ್ಯಾಲಯದಲ್ಲಿ ‘ಹೊನಲು ಬೆಳಕಿನ ಕ್ರೀಡೋತ್ಸವ’
ಮಂಗಳೂರು, ಡಿ. 7: ನಗರದ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ರವಿವಾರ ‘ಹೊನಲು ಬೆಳಕಿನ ಕ್ರೀಡೋತ್ಸವ’ ನಡೆಯಿತು.
ಶಾರದಾ ಸಮೂಹ ಸಂಸ್ಥೆಗಳ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪ್ರದರ್ಶಿಸಿದ ಮಲ್ಲಕಂಬ ಕಸರತ್ತು, ಸಮೂಹ ನೃತ್ಯ, ಸಮೂಹ ಗಾಯನ, ಸ್ಕೌಟ್ಸ್ ಗೈಡ್ಸ್, ತಾಲೀಮು ಪ್ರದರ್ಶನ ಇತ್ಯಾದಿ ಪ್ರೇಕ್ಷಕರ ಮನಸೂರೆಗೊಳಿಸಿತು.
ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ದೈಹಿಕ ಕಸರತ್ತುಗಳು ವೀಕ್ಷಕರನ್ನು ರೋಮಾಂಚನಗೊಳಿಸಿತು.
ಬೆಂಕಿಯೊಂದಿಗಿನ ಸರಸದ ಆಟಗಳು, ಸಾಹಸ ಪ್ರದರ್ಶನಗಳು ವಿದ್ಯಾರ್ಥಿಗಳ ಕಲಾ ನೈಪುಣ್ಯತೆಗೆ ಸಾಕ್ಷಿಯಾದವು. ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಇಲ್ಲದಂತೆ ನಗರದ ಮಕ್ಕಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು
ದೇಸಿ ಕ್ರೀಡೆಗೆ ಪ್ರೋತ್ಸಾಹ ಅಭಿನಂದನಾರ್ಹ : ಸಂಸದ ಒಡೆಯರ್
ಕ್ರೀಡೋತ್ಸವ ಉದ್ಘಾಟಿಸಿದ ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶಾರದಾ ವಿದ್ಯಾಸಂಸ್ಥೆಯಲ್ಲಿ ಅಚ್ಚುಕಟ್ಟು ವ್ಯವಸ್ಥೆಯೊಂದಿಗೆ ಧರ್ಮ ಪಾಲನೆ- ಸಂಸ್ಕೃತಿ ರಕ್ಷಣೆ, ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಲ್ಲಿ ಜಾಗೃತಿ, ದೇಶಾಭಿಮಾನ ಮೂಡಿಸುವ ಕೆಲಸ ನಡೆಯುತ್ತಿರುವುದು ಅಭಿನಂದನಾರ್ಹ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಪರಂಪರೆಗೆ ಮೈಸೂರು ಹೃದಯವಾದರೆ, ಕರಾವಳಿ ಬೆನ್ನೆಲುಬು ಇದ್ದಂತೆ. ಕರಾವಳಿಯಲ್ಲಿ ರಾಜ್ಯದ ಪರಂಪರೆಯ ರಕ್ಷಣೆಯ ಕಾರ್ಯ ನಡೆಯುತ್ತಿದೆ. ನಮ್ಮ ಶಕ್ತಿ ಮೀರಿ ನಾವು ಕೆಲಸ ಮಾಡಿದರೆ ಅದು ರಾಷ್ಟ್ರಕ್ಕೆ ದೊಡ್ಡ ಕೊಡುಗೆಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಮಾತನಾಡಿ, ಈ ಕ್ರೀಡೋತ್ಸವದಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆ ಪ್ರದರ್ಶಿಸುತ್ತಿದ್ದಾರೆ. ಶಾರದಾ ವಿದ್ಯಾಲಯ ಆರಂಭವಾಗಿ 33 ವರ್ಷಗಳು ಸಂದಿದ್ದು, ಮೆಕಾಲೆ ಶಿಕ್ಷಣ ಪದ್ಧತಿಗೆ ಪರ್ಯಾಯವಾಗಿ ಭಾರತೀಯ ಜೀವನ ಮೌಲ್ಯ, ಸಂಸ್ಕಾರಗಳನ್ನು, ಭಾರತೀಯ ಚಿಂತನೆಗಳಿಗೆ ಅವಕಾಶ ಕೊಡುವ ಕೆಲಸ ಮಾಡಲಾಗುತ್ತಿದೆ. ಶಾರದಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 8 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭ ಶಾರದಾ ಸಮೂಹ ಸಂಸ್ಥೆ ವತಿಯಿಂದ ಯದುವೀರ್ ಅವರಿಗೆ ಆರತಿ ಬೆಳಗಿ ಗೌರವಾರ್ಪಣೆ ಸಲ್ಲಿಸಲಾಯಿತು. ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ರಚಿಸಿದ ಕಲಾಕೃತಿಯನ್ನು ಕೊಡುಗೆಯಾಗಿ ನೀಡಲಾಯಿತು.
ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ , ಉದ್ಯಮಿ ನಾಗಾರ್ಜುನ್, ಶಾರದಾ ವಿದ್ಯಾಸಂಸ್ಥೆಗಳ ನಿರ್ದೇಶಕ ಹಾಗೂ ಟ್ರಸ್ಟಿ ಸಮೀರ್ ಪುರಾಣಿಕ್, ಕರ್ಣಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಹಾಗೂ ಸಿಇಒ ರಾಘವೇಂದ್ರ ಭಟ್, ಸುನಂದಾ ಪುರಾಣಿಕ್, ಕರ್ನಾಟಕ ಹೈಕೋರ್ಟ್ನ ವಕೀಲ ಅರುಣ್ ಶ್ಯಾಮ್, ಪ್ರಮುಖರಾದ ಪ್ರದೀಪ ಕುಮಾರ ಕಲ್ಕೂರ, ರಘುನಾಥ ಸೋಮಯಾಜಿ, ಸುಧಾಕರ ರಾವ್ ಪೇಜಾವರ, ಪ್ರೊ. ಲೀಲಾ ಉಪಾಧ್ಯಾಯ, ಸೀತಾರಾಮ ಭಟ್, ಪ್ರಕಾಶ್ ಇಳಂತಿಲ, ಪ್ರಾಂಶುಪಾಲರಾದ ಪ್ರಕಾಶ್ ನಾಯಕ್, ದಯಾನಂದ ಕಟೀಲ್, ಸತ್ಯ ನಾರಾಯಣ ಭಟ್ , ವಿದ್ಯಾ ಭಾರತಿಯ ಹಿರಿಯರಾದ ವಸಂತ ಮಾಧವ ಮತ್ತಿತರರು ಉಪಸ್ಥಿತರಿದ್ದರು.
ರಮೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.