ಮಂಗಳೂರು | ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ
ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ
ಮಂಗಳೂರು, ಜ. 14: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಮಹಿಳಾ ಭಾಗವತರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ.
ಶ್ರೀ ಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಜ.23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಜ.21ರಿಂದ 23ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದ್ದು, ಜ.23ರಂದು ರಾತ್ರಿ 7 ಗಂಟೆಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ ಕದ್ರಿ ಮಹಿಳಾ ಯಕ್ಷಕೂಟದವರಿಂದ ಮಹಿಳಾ ಯಕ್ಷಗಾನ, ನಮ್ಮ ಬೆದ್ರ ತಂಡದವರಿಂದ ತುಳು ನಾಟಕ ನಡೆಯಲಿದೆ. ಇದೇ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಕುಂದೇಶ್ವರ ಕಲಾಭೂಷಣ ಪ್ರಶಸ್ತಿ :
ರಂಗಭೂಮಿ ಕಲಾವಿದರಿಗೆ ನೀಡಲಾಗುವ ಕುಂದೇಶ್ವರ ಕಲಾಭೂಣ ಭೂಷಣ ಪ್ರಶಸ್ತಿ ಈ ಬಾರಿ ಉಮೇಶ್ ಮಿಜಾರು ಅವರಿಗೆ ಪ್ರದಾನ ಮಾಡಲಾಗುವುದು. ಸಮಾರಂಭದ ಬಳಿಕ ನಮ್ಮ ಬೆದ್ರ ಕಲಾವಿದರಿಂದ ವೈರಲ್ ವೈಶಾಲಿ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದವರು ತಿಳಿಸಿದರು.