ಮಂಗಳೂರು| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ದಂಡ
ಮಂಗಳೂರು, ಮಾ.6: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗೌರೀಶ್ ಯಾನೆ ಸುಜಿತ್ ಎಂಬಾತನಿಗೆ 2 ವರ್ಷ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.
ಜಪ್ಪಿನಮೊಗರು ಬಳಿ ಆರೋಪಿ ಗೌರೀಶ್ ಯಾನೆ ಸುಜಿತ್ ಕಾರಿನಲ್ಲಿ ಮಾರಕಾಯುಧಗಳೊಂದಿಗೆ ತಿರುಗಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಎಸ್ಸೈ ಕಬ್ಬಾಳ್ರಾಜ್ ಆರೋಪಿಯನ್ನು ವಶಕ್ಕೆ ಪಡೆಯಲು ಹೋದಾಗ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಯತ್ನಿಸಿದ್ದ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಮಾರುತಿ ಕಮತೆ ವಾದ, ಪ್ರತಿವಾದಗಳನ್ನು ಆಲಿಸಿ ಆರೋಪಿಗೆ ಭಾರತೀಯ ದಂಡ ಸಂಹಿತೆ ಕಲಂ 353ಕ್ಕೆ 2 ವರ್ಷಗಳ ಸಾದಾ ಕಾರಾಗೃಹ ವಾಸದ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ಕಲಂ 307ರಡಿ 2 ವರ್ಷಗಳ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು 5 ಸಾವಿರ ರೂ. ದಂಡ, ಆಯುಧಗಳ ಅಧಿನಿಯಮ ಕಲಂ 25ಕ್ಕೆ 2 ವರ್ಷಗಳ ಸಾದಾ ಕಾರಾಗೃಹವಾಸದ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಎಲ್ಲ ಶಿಕ್ಷೆಗಳನ್ನು ಏಕಕಾಲಕ್ಕೆ ಅನುಭವಿಸಲು ಆದೇಶದಲ್ಲಿ ತಿಳಿಸಲಾಗಿದೆ.
ಕಂಕನಾಡಿ ಪೊಲೀಸ್ ನಿರೀಕ್ಷಕರಾಗಿದ್ದ ಅಶೋಕ್ ಪಿ. ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ನ್ಯಾಯಾಲ ಯಕ್ಕೆ ಸಲ್ಲಿಸಿದ್ದರು. ಸರಕಾರದ ಪರವಾಗಿ ಚೌಧರಿ ಮೋತಿಲಾಲ ವಾದ ಮಂಡಿಸಿರುತ್ತಾರೆ.