×
Ad

ಮುಲ್ಕಿ: ಖ್ಯಾತ ಸಾಹಿತಿ, ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ ನಿಧನ

Update: 2025-11-07 12:21 IST

ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ(88)ರು ನ.7ರ ರಾತ್ರಿ ಬೆಂಗಳೂರಿನ ಪುತ್ರಿಯ ಮನೆಯಲ್ಲಿ ನಿಧನರಾದರು.

ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಪ್ರೊಫೆಸರ್ ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ : 1565-1763 ಎನ್ನುವ ವಿಷಯದ ಮೇಲೆ ಮಹಾಪ್ರಬಂಧವನ್ನು ರಚಿಸಿ ಪಿಎಚ್.ಡಿ. ಪದವಿಯನ್ನು ಪಡೆದಿದ್ದರು.

ಮುಲ್ಕಿ ವಿಜಯಾ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ 32 ವರ್ಷ ಕರ್ತವ್ಯ ನಿರ್ವಹಿಸಿದ ವಸಂತ ಮಾಧವರು. ನಿವೃತ್ತಿಯ ನಂತರ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಪ್ರೊಫೆಸರ್‌ರಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು ಇಪ್ಪತ್ತರಷ್ಟು ಇತಿಹಾಸ ಕೃತಿಗಳನ್ನು ಮತ್ತು ಸಾವಿರಾರು ಲೇಖನಗಳನ್ನು ಬರೆದಿದ್ದಾರೆ.

ವಸಂತ ಮಾಧವರ ಕುರಿತಾದ ಕೃತಿಯನ್ನು ಡಾ. ಎಸ್. ಪದ್ಮನಾಭ ಭಟ್ಟರು ರಚಿಸಿದ್ದು, ನಾಡಿಗೆ ನಮಸ್ಕಾರ ಗ್ರಂಥಮಾಲೆಯಡಿ ಕಾಂತಾವರ ಕನ್ನಡ ಸಂಘ ಪ್ರಕಟಿಸಿದೆ.

ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರದವರು ಅವರ ವಿದ್ವತ್ತನ್ನು ಗುರುತಿಸಿ ಗೌರವಿಸಿದ್ದಾರೆ. ಗೋವಾದಲ್ಲಿ ನಡೆದ ದಕ್ಷಿಣ ಭಾರತ ಇತಿಹಾಸ ಕಾಂಗ್ರೆಸ್ಸಿನ ಮೂರನೇ ವಿಶ್ವ ಸಮ್ಮೇಳನದಲ್ಲಿ ಅವರನ್ನು ಸನ್ಮಾನಿಸಲಾಗಿದೆ. ವಸಂತ ಮಾಧವರಿಗೆ ಯುಗಪುರುಷ ಪ್ರಶಸ್ತಿ ಮತ್ತು ಕೋ. ಮ. ಕಾರಂತ ಪ್ರಶಸ್ತಿ ಲಭಿಸಿದೆ. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ, ಮುಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತುಗಳು ಸಾಹಿತ್ಯ ಸಮ್ಮೇಳನ ಸಂದರ್ಭಗಳಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿವೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕೂಡಾ ಅವರನ್ನು ಸನ್ಮಾನಿಸಿದೆ. ಲಂಡನ್ನಿನ ರೋಯಲ್ ಏಷಿಯಾಸ್ಟಿಕ್ ಸೊಸೈಟಿ 1983ರಲ್ಲಿ ಹಾಗೂ ಕಲ್ಕತ್ತಾದ ಇತಿಹಾಸ ಅಧ್ಯಯನ ಸಂಸ್ಥೆ 2017 ರಲ್ಲಿ ‘ಫೆಲೋ’ ಗೌರವ ನೀಡಿದೆ.

ಸಂತಾಪ

ವಸಂತ ಮಾಧವ ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಜ್ಯೋತಿಷಿ ವಿಶ್ವನಾಥ ಭಟ್ ಎಸ್ಕೋಡಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ತುಳು ಜನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ , ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ ಬರ್ನಾಡ್ ,ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಮುಲ್ಕಿ ವಿಜಯಾ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಪ್ರಾಂಶುಪಾಲರು, ಹಳೆ ವಿದ್ಯಾರ್ಥಿ ಸಂಘ ಹಾಗೂ ಉಪನ್ಯಾಸಕ ವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News