ಬಿಸಿಲಿನ ತಾಪ: ಕಾಲೇಜು ತರಗತಿಗಳ ವೇಳಾಪಟ್ಟಿಯಲ್ಲಿ ಬದಲಾವಣೆ
ಮಂಗಳೂರು, ಮೇ 8: ವಿದ್ಯಾರ್ಥಿಗಳು ಬೇಸಗೆಯ ಬಿಸಿಲಿನ ಸಮಸ್ಯೆ ಎದುರಿಸುತ್ತಿರುವುದನ್ನು ತಡೆಯಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿರುವ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲು ಜಿಲ್ಲಾಡಳಿತ ನಿರ್ದೆಶನದಂತೆ ಕಾಲೇಜು ಶಿಕ್ಷಣ ಇಲಾಖೆಯ ನಿರ್ಧಾರ ಕೈಗೊಂಡಿದೆ.
ಈ ಸಂಬಂಧ ಮೂರು ಜಿಲ್ಲೆಗಳ 37 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 39 ಅನುದಾನಿತ ಪದವಿ ಕಾಲೇಜುಗಳಿಗೆ ಕಾಲೇಜು ಶಿಕ್ಷಣ ನಿರ್ದೇಶನಾಲಯದ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರ ಕಚೇರಿಯಿಂದ ಸುತ್ತೋಲೆ ರವಾನೆಯಾಗಿದೆ.
ಸಂವಾದದ ವೇಳೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದೇ ರೀತಿಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿಲ್ಲ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಕಾಲೇಜುಗಳು ನಿರ್ವಹಿಸುವ ಅವಧಿ ಬೇಗ ಕೊನೆಗೊಳ್ಳಬೇಕು ಎಂದು ಸೂಚಿಸಲಾಗಿತ್ತು ಎಂದು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರ ಕಚೇರಿ ಮೂಲಗಳು ತಿಳಿಸಿವೆ.
ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಡಾ.ರಾಮೇಗೌಡ ಅವರು ದ.ಕ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಕಾಲೇಜು ಗಳ ಪ್ರಾಂಶುಪಾಲರ ಜೊತೆ ಸೋಮವಾರ ವಿಡಿಯೊ ಸಂವಾದ ನಡೆಸಿ ಪದವಿಗಳ ಕಾಲೇಜುಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ ಕಾಲೇಜು ಪ್ರಾಂಶುಪಾಲರುಗಳು ಕಾಲೇಜುಗಳ ವೇಳಾಪಟ್ಟಿ ಬದಲಾವಣೆಗೆ ಮನವಿ ಮಾಡಿದ್ದಾರೆ.
ಬೇಸಿಗೆಯ ವಾತಾವರಣದ ಉಷ್ಣಾಂಶ ಏರಿಕೆಯಾಗಿರುವ ಹಿನ್ನಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳ ಹೆತ್ತವರು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಮನವಿ ಸಲ್ಲಿಸಿ ಕೆಲವು ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ವಿದ್ಯಾರ್ಥಿಗಳು ಬಿಸಿಲಿನ ಆಘಾತದಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆ ಬಗೆ ಹರಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು.
ಜಿಲ್ಲಾಧಿಕಾರಿ ನಿರ್ದೇಶನದಂತೆ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ಸುತ್ತೋಲೆ ರವಾನೆಯಾ ಗಿದ್ದರೂ ಕೆಲವು ಕಾಲೇಜುಗಳಿಗೆ ವೇಳಾಪಟ್ಟಿ ಬದಲಾವಣೆ ಸಾಧ್ಯವಾಗುತ್ತಿಲ್ಲ. ಯಾಕೆಂದರೆ ಅಲ್ಲಿ ವಿದ್ಯಾರ್ಥಿಗಳಿಗೆ ಅನು ಕೂಲವಾಗಿರುವ ವೇಳಾಪಟ್ಟಿ ಇದೆ. ಅಲ್ಲದೆ ದೂರದ ಊರುಗಳಿಂದ ವಿದ್ಯಾರ್ಥಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ವೇಳಾಪಟ್ಟಿಯಲ್ಲಿ ಮಾರ್ಪಾಡು ಮಾಡಲು ಸಮಸ್ಯೆ ಎದುರಾಗಿದೆ.
ಮಂಗಳೂರಿನ ಡಾ.ಪಿ.ಸದಾನಂದ ಪೈ -ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪುತ್ತೂರು ಮತ್ತು ಕೇರಳದ ಕಾಸರಗೋಡಿನಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಅವರ ಅನುಕೂಲಕ್ಕಾಗಿ ಬೆಳಗ್ಗೆ 9:15ಕ್ಕೆ ತರಗತಿ ಆರಂಭಗೊಳ್ಳಲಿದೆ. ಇಲ್ಲಿರುವ ಶೇ50-60 ವಿದ್ಯಾರ್ಥಿಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮವನ್ನು ಕಲಿಯುತ್ತಿದ್ದಾರೆ. ಅವರ ತರಗತಿ ಗಳು ಮಧ್ಯಾಹ್ನ 2 ಗಂಟೆಗೆ ಮುಕ್ತಾಯಗೊಳ್ಳುತ್ತಿದೆ.