ವಾಟ್ಸ್ಆ್ಯಪ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಿಂದನೆ: ದೂರು
ಮಂಗಳೂರು, ಜ.30: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿ ವಾಟ್ಸ್ಆ್ಯಪ್ನಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ನೇತೃತ್ವ ನಿಯೋಗ ಗುರುವಾರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ನೀಡಿದೆ.
ನಗರದ ಶಕ್ತಿನಗರ ಕೊಡಿಕಂಬ ನಿವಾಸಿ ಅಶೋಕ್ ನಾಯಕ್ ಎಂಬಾತ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿ ಪೋಸ್ಟ್ ಮಾಡಿದ್ದಾನೆ. ಇದರಿಂದ ದಲಿತ ಸಮುದಾಯಕ್ಕೆ ತೀರಾ ನೋವುಂಟಾಗಿದೆ. ಈತನ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ಅಧ್ಯಕ್ಷ ದಿನೇಶ್ ಮೂಳೂರು, ಕೆಪಿಸಿಸಿ ಸದಸ್ಯೆ ಕೆ. ಅಪ್ಪಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಟಿ. ಹೊನ್ನಯ್ಯ, ದುರ್ಗಾ ಪ್ರಸಾದ್, ಕವಿತಾ ವಾಸು ನಿಯೋಗದಲ್ಲಿದ್ದರು.