×
Ad

ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ದ.ಕ. ಜಿಪಂ ಸಿಇಒ

Update: 2025-04-30 18:48 IST

ಮಂಗಳೂರು: ಎಲ್ಲರೂ ಸಮಾನರಾಗಿ ಬಾಳಿ ಬದುಕಿ, ಸಂಘರ್ಷ ಮತ್ತು ದ್ವೇಷರಹಿತ ಸಮಾಜ ನಿರ್ಮಾಣಕ್ಕೆ ಬಸವೇಶ್ವರರ ಸಂದೇಶ ಇಂದಿನ ಅಗತ್ಯವಾಗಿದೆ ಎಂದು ದ.ಕ. ಜಿಪಂ ಸಿಇಒ ಡಾ.ಕೆ.ಆನಂದ್ ಹೇಳಿದ್ದಾರೆ.

ದ.ಕ.ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ

ನಗರದ ಉರ್ವಸ್ಟೋರ್‌ನಲ್ಲಿರುವ ತುಳುಭವನದಲ್ಲಿ ಬುಧವಾರ ನಡೆದ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವಣ್ಣನವರ ತತ್ವಗಳು ಸದಾ ನಮ್ಮೊಂದಿಗೆ ಇರಬೇಕು. ಸಾಮಾಜಿಕ ಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಪ್ರತಿಪಾದಿಸಿದ್ದ ಅವರು, ಮನುಷ್ಯರಲ್ಲಿ ಮೇಲು ಕೀಳು ಎಂಬ ನಿಲುವನ್ನು ಕಠುವಾಗಿ ವಿರೋಧಿಸಿದ್ದರು. ಇದುವೇ ಉತ್ತಮ ಸಮಾಜಕ್ಕೆ ಬುನಾದಿಯಾಯಿತು ಎಂದು ಡಾ.ಕೆ. ಆನಂದ್ ಹೇಳಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪಕಣಿಯೂರು ಉಪನ್ಯಾಸ ನೀಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ತಾರನಾಥ ಗಟ್ಟಿ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಎಸ್. ಗುರುಮೂರ್ತಿ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News