×
Ad

ದ.ಕ. ಜಿಲ್ಲೆಯ ಜನತೆಗೆ ಇಂದಿರಾ ಗಾಂಧಿಯ ಋಣವಿದೆ: ರಮಾನಾಥ ರೈ

Update: 2025-06-27 15:41 IST

ಮಂಗಳೂರು, ಜೂ. 27: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಹೆಸರಿನಲ್ಲಿ ಬಿಜೆಪಿ ನಾಯಕರು ಕರಾಳ ದಿನ ಆಚರಿಸುವ ಮೂಲಕ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ದ.ಕ. ಜಿಲ್ಲೆಯ ಜನರಿಗೆ ಇಂದಿರಾ ಗಾಂಧಿಯ ಋಣವಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯಿಂದ ವಿಪಕ್ಷದವರಿಗೆ ತೊಂದರೆ ಆಗಿರಬಹುದು. ಆದರೆ ದುರ್ಬಲ ವರ್ಗದವರಿಗೆ ಯಾರಿಗೂ ತೊಂದರೆ ಆಗಿಲ್ಲ. ಜೀತ ಪದ್ಧತಿ, ಋಣಭಾರ ಮುಕ್ತಿ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳ ಫಲಾನುಭವಿಗಳು ದ.ಕ. ಜಿಲ್ಲೆಯವರು ಎಂಬುದು ವಾಸ್ತವ ಎಂದರು.

ಇಂದಿರಾ ಗಾಂಧಿಯವರ ಭೂ ಮಸೂದೆ ಕಾನೂನು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಿದೆ. ಬ್ಯಾಂಕ್ ಗಳ ರಾಷ್ಟ್ರೀಕರಣದಿಂದಲೂ ಲಾಭವಾಗಿದ್ದು, ಜಿಲ್ಲೆಯ ಜನರಿಗೆ, 20 ಅಂಶಗಳ ಕಾರ್ಯಕ್ರಮ, ನಿವೇಶನ, ದಖಾಸ್ತು ಭೂಮಿ ಹೀಗೆ ಬಡವರ ಸಬಲೀಕರಣದ ಕಾರ್ಯಕ್ರಮ ಇಂದಿರಾ ಗಾಂಧಿ ಕಾಲದಲ್ಲಿ ಆಗಿದೆ ಎಂಬುದನ್ನು ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವವರಿಗೆ ನೆನಪಿಸಬೇಕಾಗಿದೆ. ತುರ್ತು ಪರಿಸ್ಥಿತಿಯ ಬಳಿಕವೂ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಭಾರೀ ಮತಗಳಿಂದ ಜಯ ಗಳಿಸಿದೆ. ಇದು ಇಂದಿರಾ ಗಾಂಧಿಯವರು ಮಾಡಿದ ಜನಪರ ಕಾರ್ಯಗಳನ್ನು ಜಿಲ್ಲೆಯ ಜನತೆ ಒಪ್ಪಿಕೊಂಡ ಕಾರಣದಿಂದ. ದೇಶದ ಸಮಗ್ರತೆಗಾಗಿ ಪ್ರಾಣ ಕೊಟ್ಟವರನ್ನು ಅವಮಾನಿಸುವ ಕಾರ್ಯ ಬಿಜೆಪಿಯಿಂದ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಓರ್ವ ಕಾರ್ಯಕರ್ತನಾಗಿ ಇಂದಿರಾ ಗಾಂಧಿಯವರ ಪ್ರಗತಿಪರ ಕಾರ್ಯಕ್ರಮಗಳನ್ನು ನೆನಪಿಸಿಕೊಳ್ಳುವುದು ನನ್ನ ಜವಾಬ್ದಾರಿ ಎಂದವರು ಹೇಳಿದರು.

ಬಿಜೆಪಿ ಸರಕಾರದ ಅವಧಿಯಲ್ಲಿ ಗುಜರಾತ್ ನರಮೇಧ, ಗೋಧ್ರಾ ಹತ್ಯಾಕಾಂಡ, ಭೀಮಾ ಕೊರೆಗಾಂವ್ ಪ್ರಕರಣ, ಈ.ಡಿ.ಯನ್ನು ಬಳಸಿಕೊಂಡು ವಿಪಕ್ಷ ನಾಯಕರನ್ನು ಜೈಲಿಗೆ ಹಾಕುವುದು, ಪತ್ರಕರ್ತರ ಮೇಲಿನ ದಬ್ಬಾಳಿಕೆ ಮಾಡಿರುವ ಬಿಜೆಪಿ ನಾಯಕರಿಗೆ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ರಮಾನಾಥ ರೈ ಹೇಳಿದರು.

ದೇಶದ ನಾಯಕರು ವಿದೇಶಕ್ಕೆ ಹೋಗುವಾಗ ಅಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುತ್ತಾರೆ. ಅಂತಹ ಉನ್ನತ ನಾಯಕತ್ವ ಮಹಾತ್ಮ ಗಾಂಧಿಯವರದ್ದು. ಆದರೆ ಇಲ್ಲಿ ಕೆಲವರು ಗಾಂಧಿ ಪ್ರತಿಮೆಗೆ ಗುಂಡು ಹೊಡೆಯುವ ನಾಟಕವಾಡಿ ವಿಜೃಂಭಿಸುತ್ತಾರೆ. ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯನ್ನು ಪೂಜಿಸುತ್ತಾರೆ ಎಂದು ರಮಾನಾಥ ರೈ ಹೇಳಿದರು.

ವಸತಿ ಯೋಜನೆಯ ಭ್ರಷ್ಟಾಚಾರ ಆರೋಪದ ಕುರಿತಂತೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮಾನಾಥ ರೈ, ಈ ಬಗ್ಗೆ ಸತ್ಯಾಸತ್ಯತೆಯ ವಿಮರ್ಶೆ ಆಗಿಲ್ಲ. ಆ ಬಗ್ಗೆ ಪ್ರತಿಕ್ರಿಯಿಸುವ ಉತ್ತರದಾಯಿತ್ವ ನನಗಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶಶಿಧರ ಹೆಗ್ಡೆ, ನವೀನ್ ಡಿಸೋಜ, ಅಪ್ಪಿಲತಾ, ಪೃಥ್ವಿರಾಜ್, ಅಶೋಕ್ ಡಿ.ಕೆ., ಅಬ್ಬಾಸ್ ಅಲಿ, ಜಯಶೀಲ ಅಡ್ಯಂತಾಯ, ಜೆ. ಸಲೀಂ, ಇಬ್ರಾಹೀಂ ನವಾಝ್, ಸುಹಾನ್ ಆಳ್ವ, ದಿನೇಶ್ಕುಮಾರ್, ನಿತ್ಯಾನಂದ ಶೆಟ್ಟಿ, ಶಬೀರ್, ಸುನೀಲ್ ಬಜಿಲಕೇರಿ, ಪ್ರಕಾಶ್ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News