ಕೇಂದ್ರ ಸರಕಾರದಿಂದ ದ.ಕ. ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಸಂಸದ ಚೌಟ
ಮಂಗಳೂರು, ಜು.28: ಕ್ಯಾನ್ಸರ್ ರೋಗಿಗಳ ಆರೈಕೆ ಹಾಗೂ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (ಡಿಸಿಸಿಸಿ) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಆರೈಕೆ ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 2025-26ರ ಕೇಂದ್ರ ಬಜೆಟ್ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಣೆ ಮಾಡಿತ್ತು. ಈ ಉಪಕ್ರಮದ ಭಾಗವಾಗಿ ಪ್ರಥಮ ಹಂತದಲ್ಲಿ ದೇಶದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದೆ. ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ಅಡಿಯಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಜಿಲ್ಲೆಗೆ ರೂ. 1.49 ಕೋಟಿ ವರೆಗೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಸ್ತಾವಿತ ಕೇಂದ್ರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕ್ಯಾನ್ಸರ್ ರೋಗ ನಿರ್ಣಯ, ಕೀಮೋಥೆರಪಿ, ಆರೈಕೆ, ಕ್ಯಾನ್ಸರ್ ತಡೆಗಟ್ಟುವಿಕೆ -ಜಾಗೃತಿ ಕಾರ್ಯಕ್ರಮ ಮತ್ತು ಚಿಕಿತ್ಸಾ ಸೇವೆಗಳ ಜೊತೆಗೆ ಇತರ ಬೆಂಬಲ ಸೇವೆಗಳು ಒದಗಿಸಲಿದೆ. ಜನರಿಗೆ ಗುಣಮಟ್ಟದ ಕ್ಯಾನ್ಸರ್ ಆರೈಕೆ ಯನ್ನು ಒದಗಿಸುವುದು ಮತ್ತು ತೃತೀಯ ಹಂತದ ಆರೈಕೆ ಕೇಂದ್ರಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಚೌಟ ತಿಳಿಸಿದ್ದಾರೆ.
ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಇದು ಒಂದು ಸಕಾಲಿಕ ನಿರ್ಧಾರವಾಗಿದ್ದು ಮಂಗಳೂರಿನಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆಯು ಶ್ರೇಣಿ 2 ಮತ್ತು 3ನೇ ಹಂತದ ನಗರಗಳಲ್ಲಿ ನಗರಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಬದ್ಧತೆ ಯನ್ನು ಎತ್ತಿ ತೋರಿಸುತ್ತದೆ. ಈ ಡೇ ಕೇರ್ ಸೆಂಟರ್ ನಲ್ಲಿ ಕ್ಯಾನ್ಸರ್ ಪೀಡಿತರಿಗೆ ಆರೈಕೆಯನ್ನು ಸ್ಥಳೀಯವಾಗಿಯೇ ಒದಗಿಸುವುದರಿಂದ ರೋಗಿಗಳು ದೂರದ ನಗರಗಳಿಗೆ ಪ್ರಯಾಣಿಸುವ ತೊಂದರೆ ತಪ್ಪುತ್ತದೆ. ಇದು ಅವರ ಚಿಕಿತ್ಸಾ ವೆಚ್ಚ ಮತ್ತು ಸಮಯವನ್ನು ಉಳಿಸುವುದಲ್ಲದೆ, ಚೇತರಿಕೆಗೆ ಅಗತ್ಯ ವಾದ ಮಾನಸಿಕ ನೆಮ್ಮದಿಯನ್ನೂ ನೀಡುತ್ತದೆ. ಮುಂದಿನ ದಿನಗಳಲ್ಲಿ ಈ ಸೆಂಟರ್ ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ನೂರಾರು ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾಗಲಿದೆ ಎಂದು ಚೌಟ ಅಭಿಪ್ರಾಯಪಟ್ಟಿದ್ದಾರೆ.