ಪುತ್ತೂರು: ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸಜೆ
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಪುತ್ತೂರು ತಾಲೂಕಿನ ಮಾಡನ್ನೂರು ನಿವಾಸಿ ಮುಹಮ್ಮದ್ ಸತ್ತಾರ್ ಶಿಕ್ಷೆಗೆ ಒಳಗಾದ ಅಪರಾಧಿ.
ಕಳೆದ ಎಪ್ರಿಲ್ 25ರಂದು ಕೆಎಸ್ಸಾರ್ಟಿಸಿ ಬಸ್ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಸಮಯ ಯುವತಿ ಕುಳಿತಿದ್ದ ಸೀಟಿನ ಪಕ್ಕ ಕುಳಿತಿದ್ದ ಆರೋಪಿ ಬಸ್ಸು ಸಂಚರಿಸುತ್ತಿದ್ದ ಸಮಯ ಲೈಂಗಿಕ ಕಿರಿಕುಳ ನೀಡಿರುವ ಬಗ್ಗೆ ದಾಖಲಾಗಿತ್ತು. ಪ್ರಕರಣದ ಬಗ್ಗೆ ತನಿಖಾಧಿಕಾರಿಗಳಾಗಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾತಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎ.ಸಿ. ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ್ ಆರೋಪಿಗೆ ನಾಲ್ಕು ತಿಂಗಳಗಳ ಕಾರಾಗೃಹವಾಸ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ನೀಡಲು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಕಾರಾಗೃಹ ಶಿಕ್ಷೆಯನ್ನು ವಿಧಿಸಿದ್ದಾರೆ.
ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕರಾಗಿ ಕವಿತಾ ಕೆ. ವಾದಿಸಿದ್ದರು.