ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ: ನ್ಯಾಯಾಧೀಶ ಜೈಶಂಕರ್
ಮಂಗಳೂರು: ನಗರದಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ ಹಾಗೂ ನ್ಯಾಯಾಧೀಶ ಜೈಶಂಕರ್ ತಿಳಿಸಿದರು.
ಜನತಾ ನ್ಯಾಯಾಲಯ ಕಚೇರಿಯಲ್ಲಿ ಸೋಮವಾರ ನಡೆದ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ ದಾಖಲು ಪ್ರಕ್ರಿಯೆ ಅತ್ಯಂತ ಸರಳವಾಗಿದ್ದು ಅತಿ ಕಡಿಮೆ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥ ಪಡಿಸಲಾಗುತ್ತಿದೆ ಎಂದು ನ್ಯಾಯಾಧೀಶ ಜೈಶಂಕರ್ ತಿಳಿಸಿದರು.
ಖಾಯಂ ಜನತಾ ನ್ಯಾಯಾಲಯವು ಪರ್ಯಾಯ ಪರಿಹಾರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರೇ ಸೇವೆಯಲ್ಲಿರುತ್ತಾರೆ. ಸರಳ ದಾಖಲೆ ಪ್ರಕ್ರಿಯೆ ಮತ್ತು ಅಗತ್ಯ ವಿದ್ದರೆ ಮಾತ್ರ ಸಾಕ್ಷಿ ವಿಚಾರಣೆ ನಡೆಯಲಿದೆ. ಯಾವುದೇ ನ್ಯಾಯಾಲಯ ಶುಲ್ಕ ಇರುವುದಿಲ್ಲ ಎಂದು ತಿಳಿಸಿದರು.
ಸಾರಿಗೆ ಸೇವೆ, ಅಂಚೆ, ವಿದ್ಯುತ್, ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ, ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್, ವಿಮೆ, ವೈದ್ಯಕೀಯ ನಿರ್ಲಕ್ಷ್ಯತೆ ಮತ್ತಿತರ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗುವುದು. ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ವಿವಿಧ ಸಾಲ ಸಂಬಂಧಿತ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳ ಬಹುದಾಗಿದೆ. ಇಲ್ಲಿನ ಆದೇಶವು ಅಂತಿಮವಾಗಿದ್ದು ಮೇಲ್ಮನವಿಗೆ ಅವಕಾಶವಿಲ್ಲ. 1 ಕೋ.ರೂ.ವರೆಗಿನ ಮೊತ್ತದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಗೊಳಿಸಲಾಗುತ್ತದೆ. ಅತಿ ಸಣ್ಣ ಮೊತ್ತದ ಪ್ರಕರಣಗಳನ್ನು ಕೂಡಾ ಇಲ್ಲಿ ದಾಖಲಿಸಬಹುದು ಎಂದು ನ್ಯಾಯಾಧೀಶ ಜೈಶಂಕರ್ ತಿಳಿಸಿದರು.
ಖಾಯಂ ಜನತಾ ನ್ಯಾಯಾಲಯವು ದ.ಕ. ಜಿಲ್ಲಾ ನ್ಯಾಯಾಲಯ ಸಂಕೀರ್ಣದ 6ನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದೆ. ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ವ್ಯಾಪ್ತಿಯನ್ನು ಹೊಂದಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಜೈಬುನ್ನೀಸಾ, ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ಫಝಲ್ ರಹೀಂ, ಲಾವಣ್ಯ ರೈ ಹೆಗ್ಡೆ ಉಪಸ್ಥಿತರಿದ್ದರು.