ದಿಲ್ಲಿ ಸ್ಫೋಟ ಪ್ರಕರಣ | ಪಿತೂರಿಯ ಹಿಂದಿರುವ ಯಾರನ್ನೂ ಬಿಡುವುದಿಲ್ಲ ಎಂದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (Photo: PTI)
ಥಿಂಪು (ಭೂತಾನ್): “ಈ ಪಿತೂರಿಯ ಹಿಂದಿರುವ ಯಾರನ್ನೂ ಬಿಡುವುದಿಲ್ಲ. ಇದಕ್ಕೆ ಕಾರಣರಾದ ಎಲ್ಲ ವ್ಯಕ್ತಿಗಳನ್ನು ಕಟಕಟೆಯಲ್ಲಿ ನಿಲ್ಲಿಸಲಾಗುವುದು,” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.
ದಿಲ್ಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ ಒಂಭತ್ತು ಮಂದಿ ಪ್ರಾಣ ಕಳೆದುಕೊಂಡ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಭೂತಾನಿನ ರಾಜ ಜಿಗ್ಮೆ ಸಿಂಗ್ಯೆ ವಾಂಗ್ಚುಕ್ ಅವರ 70ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳಲು ಥಿಂಪುವಿಗೆ ಆಗಮಿಸಿದ್ದ ಪ್ರಧಾನಿ, ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು.
“ಈ ದಾಳಿ ಭಯಾನಕವಾಗಿದೆ. ಸಂತ್ರಸ್ತ ಕುಟುಂಬಗಳ ನೋವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇಡೀ ರಾಷ್ಟ್ರವು ಅವರೊಂದಿಗಿದೆ. ನಿನ್ನೆ ರಾತ್ರಿಯಿಡೀ ತನಿಖಾ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದೆ. ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಪತ್ತೆಹಚ್ಚುತ್ತವೆ,” ಎಂದು ಮೋದಿ ಹೇಳಿದರು.
ಸೋಮವಾರ ಸಂಜೆ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ನಿಧಾನವಾಗಿ ಚಲಿಸುತ್ತಿದ್ದ ಕಾರಿನಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಿಂದ ಸ್ಥಳದಲ್ಲಿ ಭೀತಿ ಹರಡಿತ್ತು.