ದಿಲ್ಲಿ ವಿಧಾನಸಭಾ ಸದಸ್ಯರಾಗಿ ಸಿಎಂ ರೇಖಾ ಗುಪ್ತಾ, ಸಚಿವ ಸಂಪುಟ ಸದಸ್ಯರ ಪ್ರಮಾಣ ವಚನ
Update: 2025-02-24 15:13 IST
Photo credit: PTI
ಹೊಸದಿಲ್ಲಿ: ಸೋಮವಾರದಿಂದ ಆರಂಭವಾದ ದಿಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಸಚಿವ ಸಂಪುಟದ ಸದಸ್ಯರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮೊದಲು, ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರು ದಿಲ್ಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು. ಬಳಿಕ ಹಂಗಾಮಿ ಸ್ಪೀಕರ್ ಅರವಿಂದ್ ಸಿಂಗ್ ಲವ್ಲಿ, ಉಳಿದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
ನಾಳೆ, ಮಂಗಳವಾರ ವಿಧಾನಸಭೆಯನ್ನು ಉದ್ದೇಶಿಸಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಮಾತನಾಡಲಿದ್ದಾರೆ. ನಂತರ ಸಿಎಜಿ ವರದಿಗಳನ್ನು ಮಂಡಿಸುವ ಸಾಧ್ಯತೆ ಇದೆ. ಲೆಫ್ಟಿನೆಂಟ್ ಗವರ್ನರ್ ಅವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ಫೆ. 26ರಂದು ನಡೆಯಲಿದೆ ಎಂದು ಮೂಲಗಳು ಹೇಳಿವೆ.