ಹೈದರಾಬಾದ್, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ; ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ನಗರಗಳು : ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್| PC : x/@DKShivakumar
ಹೈದರಾಬಾದ್ : ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸೋಮವಾರ ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ ಅಂತ ಅಂದುಕೊಂಡಿದ್ದೆ. ಆದರೆ ಜಾಗತಿಕ ಮಟ್ಟದಲ್ಲಿ ತೆಲಂಗಾಣ ಗುರುತಿಸಿಕೊಳ್ಳುತ್ತಿದೆ. ತೆಲಂಗಾಣ ಸರಕಾರ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದು ಸಂತಸದ ವಿಚಾರ. ಈ ಸಂದರ್ಭದಲ್ಲಿ ಇಂತಹ ಪ್ರಯತ್ನಕ್ಕೆ ಮುಂದಾಗಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಇಂದು ನನ್ನ ಸ್ನೇಹಿತ ರೇವಂತ್ ರೆಡ್ಡಿ ಅವರಿಗಾಗಿ ಬಂದಿದ್ದೇನೆ ಎಂದರು.
"ಹೈದರಾಬಾದ್ ದೊಡ್ಡನಗರ, 2047ರ ವೇಳೆಗೆ ಇದು ಯಾವ ಮಟ್ಟಕ್ಕೆ ಬೆಳೆಯಲಿದೆ ಎಂಬುದರ ಚಿತ್ರಣ ಕೊಡುತ್ತಿದೆ. "ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು." ಮುಂದಿನ ಪೀಳಿಗೆಗೆ ನೀವು ರೂಪಿಸುತ್ತಿರುವ ಯೋಜನೆ ಉತ್ತಮವಾಗಿದೆ" ಎಂದು ಅವರು ತಿಳಿಸಿದರು.
"ಈ ಸಮ್ಮೇಳನವು ಇವತ್ತಿನ ಬಗ್ಗೆ ಆಲೋಚನೆಮಾಡುತ್ತಿಲ್ಲ. ಭವಿಷ್ಯದ ಬಗ್ಗೆ ಚಿಂತನೆ ನಡೆಸಿದೆ. 10 ವರ್ಷಗಳ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರವನ್ನು ಆಯ್ಕೆ ಮಾಡಿ, ಈ ಸರಕಾರಕ್ಕೆ ವಿಶ್ವಾಸ ತುಂಬಿದ ಜನರಿಗೆ ಅಭಿನಂದನೆಗಳು. ಸಿಎಂ ರೇವಂತ್ ರೆಡ್ಡಿ ಹಾಗೂ ಅವರ ಸಂಪುಟ ಸಚಿವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ" ಎಂದರು.
"ನಮ್ಮ ರಾಜ್ಯದಲ್ಲಿ ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದರೂ ಇಲ್ಲಿಗೆ ಬಂದಿದ್ದೇನೆ. ಇಡೀ ದಕ್ಷಿಣ ಭಾರತ ತೆಲಂಗಾಣ ರಾಜ್ಯದ ಬೆನ್ನಿಗೆ ನಿಲ್ಲುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಲಿದೆ. ನಾನು ಇಲ್ಲಿ ಕರ್ನಾಟಕದ ಡಿಸಿಎಂ ಆಗಿ ಮಾತ್ರ ಬಂದಿಲ್ಲ. ದಕ್ಷಿಣ ಭಾರತದ ಧ್ವನಿಯಾಗಿ ಬಂದಿದ್ದೇನೆ. ದೇಶದ ಪ್ರಗತಿಯಲ್ಲಿ ದಕ್ಷಿಣ ಭಾರತದ ಕೊಡುಗೆ ಅಪಾರ" ಎಂದು ಅವರು ತಿಳಿಸಿದರು.
"ತೆಲಂಗಾಣ ರಾಜ್ಯದ ಜಾಗತಿಕ ದೃಷ್ಟಿಕೋನವನ್ನು ಗಮನಿಸಿದೆ. ತೆಲಂಗಾಣ ಚಿಕ್ಕ ರಾಜ್ಯ. ದೇಶದ ಐಟಿ ರಫ್ತಿನಲ್ಲಿ ಬೆಂಗಳೂರು ಶೇ.43ರಷ್ಟು ಪಾಲು ಹೊಂದಿದೆ. ತೆಲಂಗಾಣ ಈ ವಿಚಾರದಲ್ಲಿ ಕಡಿಮೆ ಇದ್ದರೂ ಈ ರಾಜ್ಯದ ದೂರದೃಷ್ಟಿ, ಆಲೋಚನೆ ದೊಡ್ಡದಾಗಿದೆ. ನಿಮಗೆ ಬೆಂಬಲ ನೀಡಲು ನಾನು ಈ ಕಾರ್ಯಕ್ರಮಕ್ಕೆ ಬಂದಿರುವೆ. ದೇಶದ ಪ್ರಗತಿಯ ಬಗ್ಗೆ ಚರ್ಚೆ ಮಾಡುವಾಗ ಬೆಂಗಳೂರು ಹಾಗೂ ಹೈದರಾಬಾದ್ ಕೊಡುಗೆ ಸ್ಮರಿಸದೆ ಚರ್ಚೆ ಪೂರ್ಣವಾಗುವುದಿಲ್ಲ ಎಂದರು.
ಕೆಲವರು, ಬೆಂಗಳೂರಿಗೆ ಹೈದರಾಬಾದ್ ಪ್ರತಿಸ್ಪರ್ಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಸತ್ಯ ಬೇರೆಯದೆ ಇದೆ. ನಾವು ಸ್ಪರ್ಧಿಗಳಲ್ಲ. ಪರಸ್ಪರ ಸಹಕಾರ ನೀಡಿ, ಜೊತೆಯಾಗಿ ಪ್ರಗತಿ ಸಾಧಿಸುವ ಮೂಲಕ ಭವಿಷ್ಯ ಭಾರತ ನಿರ್ಮಾಣಕ್ಕೆ ಕೊಡುಗೆಯಾಗೋಣ. ನಾನು ರತನ್ ಟಾಟಾ ಅವರನ್ನು ಭೇಟಿಯಾದಾಗ ಅವರು ನನಗೆ ಒಂದು ಮಾತು ಹೇಳಿದರು. "ನೀವು ವೇಗವಾಗಿ ಸಾಗಬೇಕಾದರೆ ಒಬ್ಬರೇ ಸಾಗಿ, ನೀವು ಬಹುದೂರ ಸಾಗಬೇಕಾದರೆ ಒಟ್ಟಿಗೆ ಸಾಗಿ" ಎಂದು ಸಲಹೆ ನೀಡಿದ್ದರು. ಅದರಂತೆ ನಾವು ಒಟ್ಟಾಗಿ ಸಾಗೋಣ. ಈ ಎರಡು ನಗರಗಳ ಪ್ರಗತಿಗೆ ಸಹಕರಿಸೋಣ" ಎಂದರು.
"ದಕ್ಷಿಣ ಭಾರತವು ದೇಶದ ಜಿಡಿಪಿಯಲ್ಲಿ ಶೇ.31ರಷ್ಟು ಕೊಡುಗೆ ನೀಡಿದೆ. ಮುಂದೆ ಇದು ಶೇ.43ರಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನ ಬಗ್ಗೆ ನಾನು ಹೆಚ್ಚು ಮಾತನಾಡಿದರೆ ನಿಮಗೆ ಸ್ಪರ್ಧೆ ನೀಡುತ್ತಿರುವಂತೆ ಭಾಸವಾಗುತ್ತದೆ. ಹೀಗಾಗಿ ಬೆಂಗಳೂರಿನ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಇಂಜಿನಿಯರ್ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 25 ಲಕ್ಷ ಇಂಜಿನಿಯರ್ ಗಳು ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ ಕೂಡ ಉತ್ತಮ ಸಾಮರ್ಥ್ಯ ಹೊಂದಿದೆ. ನಾವು ಒಟ್ಟಾಗಿ ಶ್ರಮಿಸೋಣ" ಎಂದು ಕರೆ ನೀಡಿದರು.
"ಇಲ್ಲಿ ಪಾರದರ್ಶಕವಾದ ಮಾದರಿ ಪರಿಚಯಿಸಲಾಗುತ್ತಿದ್ದು, ಈ ನಗರ ಆರೋಗ್ಯ, ತಂತ್ರಜ್ಞಾನ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕ್ಷಮತೆ ಹೊಂದಿದೆ. ದಕ್ಷಿಣ ಭಾರತದಲ್ಲಿರುವ ಮಾನವ ಸಂಪನ್ಮೂಲ ಬೇರೆ ಯಾವುದೇ ರಾಜ್ಯ ಅಥವಾ ದೇಶದಲ್ಲಿಲ್ಲ. ಈ ಕಾರ್ಯಕ್ರಮಕ್ಕೆ ಜಗತ್ತಿನ ಪ್ರಮುಖ ಕೈಗಾರಿಕೋದ್ಯಮಿಗಳು ಬಂದಿದ್ದು, ತೆಲಂಗಾಣ ರಾಜ್ಯ ಕಾಂಗ್ರೆಸ್ ಸರಕಾರದ ನೇತೃತ್ವದಲ್ಲಿ ಉತ್ತಮ ದೂರದೃಷ್ಟಿ ಹೊಂದಿದೆ" ಎಂದು ತಿಳಿಸಿದರು.
"ರೇವಂತ್ ರೆಡ್ಡಿ ನಾಯಕತ್ವದಲ್ಲಿ ಸಚಿವರು, ಅಧಿಕಾರಿಗಳು ಒಟ್ಟಿಗೆ ಶ್ರಮಿಸಿ, ತೆಲಂಗಾಣ ರಾಜ್ಯವನ್ನು ಜಾಗತಿಕ ಮಟ್ಟಕ್ಕೆ ಮುನ್ನಡೆಸಲಿದ್ದಾರೆ. ಇವರ ಬೆಂಬಲವಾಗಿ ಕರ್ನಾಟಕ ಸರಕಾರ ನಿಲ್ಲಲಿದೆ. ಇಲ್ಲಿಗೆ ಆಗಮಿಸಿರುವ ಹೂಡಿಕೆದಾರರು ನಮ್ಮ ಮೇಲೆ ವಿಶ್ವಾಸವಿಡಿ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ" ಎಂದರು.