ಚುನಾಯಿತ ಜನಪ್ರತಿನಿಧಿಗಳು ಕಾನೂನು ರೂಪಿಸುವಲ್ಲಿ ಸಕ್ರಿಯ ಪಾತ್ರ ನಿರ್ವಹಿಸಬೇಕು: ಸ್ಪೀಕರ್ ಯು.ಟಿ.ಖಾದರ್
ಉತ್ತರ ಪ್ರದೇಶದ ವಿಧಾನ ಮಂಡಲದಲ್ಲಿ ಸ್ಪೀಕರ್ಗಳ ಸಮ್ಮೇಳನ
ಲಕ್ನೋ: ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಲ್ಲ, ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ, ಜನಸಾಮಾನ್ಯರ ಆಶಯಗಳನ್ನು ಪ್ರತಿಬಿಂಬಿಸುವ ಕಾನೂನುಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಅದು ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸುವ ಮೂಲ ಆಧಾರವಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಉತ್ತರ ಪ್ರದೇಶದ ವಿಧಾನ ಮಂಡಲದಲ್ಲಿ ಮಂಗಳವಾರ ನಡೆದ ಸ್ಪೀಕರ್ಗಳ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಧಾನ ಮಂಡಲವು ಪ್ರಜಾಪ್ರಭುತ್ವದ ಹೃದಯವಾಗಿದೆ. ಶಾಸಕರು ಮತ್ತು ಜನಪ್ರತಿನಿಧಿಗಳು ಅದರ ಪ್ರಮುಖ ಅಂಗಗಳಾಗಿದ್ದಾರೆ. ಜನರ ಆಶಯಗಳನ್ನು ಧ್ವನಿಯಾಗಿ ಪರಿವರ್ತಿಸಿ, ಸಮಾಜಕ್ಕೆ ಅಗತ್ಯವಾದ ಕಾನೂನುಗಳನ್ನು ರೂಪಿಸುವ ಮಹತ್ತರ ಹೊಣೆಗಾರಿಕೆ ಜನಪ್ರತಿನಿಧಿಗಳ ಮೇಲಿದೆ. ಆದ್ದರಿಂದ ಶಾಸಕರ ಹಾಗೂ ಜನಪ್ರತಿನಿಧಿಗಳ ಸಾಮರ್ಥ್ಯವರ್ಧನೆ ಇಂದಿನ ತುರ್ತು ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ನಡೆಯುತ್ತಿರುವ ಚರ್ಚೆಗಳು ಅತ್ಯಂತ ಸ್ವಾಗತಾರ್ಹ ಎಂದು ಯು.ಟಿ.ಖಾದರ್ ನುಡಿದರು.
ಓರ್ವ ಜನಪ್ರತಿನಿಧಿಯ ಕರ್ತವ್ಯವು ಕೇವಲ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಮಾತ್ರ ಸೀಮಿತವಾಗಿರದೆ, ವಿಧಾನಸಭೆಯ ಅಧಿವೇಶನಗಳು ಹಾಗೂ ಕಾನೂನು ರೂಪಿಸುವುದಕ್ಕೆ ಸಂಬಂಧಿಸಿದ ಮಹತ್ವದ ಸಭೆಗಳಲ್ಲಿ ಸಮಾಜದ ವಿವಿಧ ವರ್ಗಗಳ ಆಶಯಗಳನ್ನು ಸಮರ್ಥವಾಗಿ ಪ್ರತಿಬಿಂಬಿಸುವ ಜವಾಬ್ದಾರಿಯೂ ಒಳಗೊಂಡಿರುತ್ತದೆ. ಅದನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯವಾದ ಜ್ಞಾನ, ಅಧ್ಯಯನ ಮತ್ತು ಸಮಗ್ರ ಮಾಹಿತಿಯನ್ನು ಹೊಂದಿರುವುದು ಅತ್ಯಂತ ಅವಶ್ಯಕವಾಗಿದೆ. ಹಾಗಾಗಿ ಜನಪ್ರತಿನಿಧಿಗಳಿಗೆ ಕಾಲಕಾಲಕ್ಕೆ ಮಾಹಿತಿ ಒಳಗೊಂಡ ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಉಪಯುಕ್ತವಾಗಿದೆ. ಒಬ್ಬ ವ್ಯಕ್ತಿ ಶಾಸಕನಾಗುವ ಮೊದಲು ಅಧಿವೇಶನಗಳನ್ನು ವೀಕ್ಷಿಸಿ, ನಾನೂ ಜನಪ್ರತಿನಿಧಿಯಾಗಿ ಭಾಗವಹಿಸಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಎಂಬ ಆಸೆ ಹೊಂದುವುದು ಸಹಜ. ಆದರೆ ಶಾಸಕನಾದ ನಂತರ ಅಧಿವೇಶನಗಳಲ್ಲಿ ಭಾಗವಹಿಸಲು ಆಸಕ್ತಿ ತೋರಿಸದಿರುವುದು ಗಂಭೀರ ಚಿಂತನೆಯ ವಿಷಯವಾಗಿದೆ. ಶಾಸಕರು ಅಧಿವೇಶನಗಳಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ರಾಷ್ಟ್ರಮಟ್ಟದಲ್ಲಿ ಸ್ಪಷ್ಟ ನಿಯಮಗಳನ್ನು ರೂಪಿಸುವ ಅಗತ್ಯವಿರುವುದರ ವಿಚಾರದ ಮೇಲೂ ಚರ್ಚೆ ನಡೆಯಬೇಕು ಎಂದು ಯು.ಟಿ. ಖಾದರ್ ಕರೆ ನೀಡಿದರು.
ಸಾರ್ವಜನಿಕ ಟೀಕೆ-ಟಿಪ್ಪಣಿಗಳು ಎಷ್ಟೇ ಇದ್ದರೂ ಜನಪ್ರತಿನಿಧಿಗಳು ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಸ್ಪೀಕರ್ಗಳು ಮುಂದಾಗಬೇಕು. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಶಾಸಕರಿಗೆ ಅಗತ್ಯವಿರುವ ಕೆಲವು ಪ್ರಮುಖ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.