ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ದಿಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಮುಖ್ಯಮಂತ್ರಿ ಕೇಜ್ರಿವಾಲ್
Update: 2023-07-08 21:46 IST
ಅರವಿಂದ ಕೇಜ್ರಿವಾಲ್ | Photo: PTI
ಹೊಸದಿಲ್ಲಿ: ಕಳೆದ ಎರಡು ವರ್ಷಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಗೊಳ್ಳುತ್ತಿರುವ ದಿಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಇಲ್ಲಿ ತಿಳಿಸಿದರು.
ತ್ಯಾಗರಾಜ ಸ್ಟೇಡಿಯಮ್ ನಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆಗಳಲ್ಲಿ ತೇರ್ಗಡೆಗೊಂಡಿರುವ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಪ್ರತಿಯೊಂದು ಮಗುವಿಗೂ ಸಮಾನ ಮತ್ತು ಗುಣಮಟ್ಟದ ಶಿಕ್ಷಣ ದೊರೆಯುವವರೆಗೂ ದೇಶವು ಅಭಿವೃದ್ಧಿಗೊಳ್ಳಲು ಸಾಧ್ಯವಿಲ್ಲ ಎಂದರು.
ದೇಶದ ಅಭಿವೃದ್ಧಿಗೆ ಶಿಕ್ಷಣವು ಅತ್ಯಗತ್ಯವಾಗಿದೆ ಎಂದು ಹೇಳಿದ ಅವರು,‘ಈ ಹಿಂದೆ ದಿಲ್ಲಿಯ ಸರಕಾರಿ ಶಾಲೆಗಳು ಕಳಪೆ ಸ್ಥಿತಿಯಲ್ಲಿದ್ದವು. ಈಗ ಇದೇ ಸರಕಾರಿ ಶಾಲೆಗಳಲ್ಲಿ ನಾವು ತಂದಿರುವ ಪರಿವರ್ತನೆಯನ್ನು ವಿದ್ಯಾರ್ಥಿಗಳ ಪೋಷಕರೂ ಒಪ್ಪಿಕೊಳ್ಳುತ್ತಿದ್ದಾರೆ ’ ಎಂದರು.