ಕೇರಳದ ಮಾಜಿ ಸಿಎಂ, ಸಿಪಿಎಂನ ಹಿರಿಯ ನಾಯಕ ಅಚ್ಯುತಾನಂದನ್ ನಿಧನ
Update: 2025-07-21 16:27 IST
ವಿ.ಎಸ್.ಅಚ್ಯುತಾನಂದನ್ (Photo:X/@pinarayivijayan)
ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ.ಎಸ್.ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು.
ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಶತಾಯುಷಿಯಾದ ಅಚ್ಯುತಾನಂದನ್ (101), ಕೇರಳ ರಾಜಕಾರಣದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವ್ಯಕ್ತಿಯಾಗಿದ್ದಾರೆ. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅಚ್ಯುತಾನಂದನ್, 2006ರಿಂದ 2011ರವರೆಗೆ ಕೇರಳ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅವರು ಒಟ್ಟು 10 ಚುನಾವಣೆಗಳನ್ನು ಎದುರಿಸಿದ್ದಾರೆ.
ಅಚ್ಯುತಾನಂದನ್ ಕಳೆದ ಕೆಲವು ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.