×
Ad

ಮಥುರಾದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ನಡೆಸಲು ಅಲಹಾಬಾದ್‌ ಹೈಕೋರ್ಟ್‌ ಅನುಮತಿ

Update: 2023-12-14 16:36 IST

Photo: ANI

ಪ್ರಯಾಗರಾಜ್: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ ಸಮೀಕ್ಷೆಯ ಮಾದರಿಯಲ್ಲಿ ಉತ್ತರ ಪ್ರದೇಶದ ಮಥುರಾದಲ್ಲಿರುವ 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಹಸಿರು ನಿಶಾನೆ ನೀಡಿದೆ.

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಯಲಿದ್ದು, ಆಯುಕ್ತರ ಗುರುತು, ಸಮೀಕ್ಷೆಯ ವಿಧಾನಗಳನ್ನು ಸೋಮವಾರ ನಿರ್ಧರಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದುತ್ವ ಸಂಘಟನೆಗಳು ಹೇಳಿಕೊಂಡಿದ್ದು, ಸಮೀಕ್ಷೆಗೆ ಒತ್ತಾಯಿಸಿವೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಸ್ಥಳೀಯ ನ್ಯಾಯಾಲಯವು ಬೇಡಿಕೆಯನ್ನು ಅಂಗೀಕರಿಸಿದ್ದು, ಮಸೀದಿ ಪರ ಅರ್ಜಿದಾರರು ಹೈಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸಿದ್ದರು. ಈ ತೀರ್ಪಿನ ವಿರುದ್ಧ ಮಸೀದಿ ಪರ ಅರ್ಜಿದಾರರು ಸುಪ್ರೀಂ ಕೋರ್ಟ್‌ನ ಮೊರೆ ಹೋಗುವ ಸಾಧ್ಯತೆ ಇದೆ.

ವಿವಾದಿತ 13.37 ಎಕರೆ ಜಮೀನಿನ ಸಂಪೂರ್ಣ ಮಾಲಕತ್ವಕ್ಕೆ ಆಗ್ರಹಿಸಿ ಹಿಂದುತ್ವ ಸಂಘಟನೆಗಳು ಮಥುರಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕತ್ರಾ ಕೇಶವ್ ದೇವ್ ದೇವಸ್ಥಾನವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಮಸೀದಿಯ ಕೆಲವು ಗೋಡೆಗಳ ಮೇಲೆ ಕಮಲದ ಕೆತ್ತನೆಗಳು ಮತ್ತು ಹಿಂದೂ ಪುರಾಣಗಳಲ್ಲಿ ಹಾವಿನ ದೇವತೆಯಾದ 'ಶೇಷನಾಗ್' ಅನ್ನು ಹೋಲುವ ಆಕಾರಗಳು ಇವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

1968 ರಲ್ಲಿ, ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಸ್ಥಾನ ಮತ್ತು ಶಾಹಿ ಮಸೀದಿ ಈದ್ಗಾ ಟ್ರಸ್ಟ್ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು, ಅದರ ಅಡಿಯಲ್ಲಿ 10.9 ಎಕರೆ ಭೂಮಿಯನ್ನು ಕೃಷ್ಣ ಜನ್ಮಭೂಮಿಗೆ ಮತ್ತು ಉಳಿದ 2.5 ಎಕರೆ ಭೂಮಿಯನ್ನು ಮಸೀದಿಗೆ ನೀಡಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News