×
Ad

"ದೇಶದ್ರೋಹಕ್ಕೆ ಸಮಾನ": ‘ನಿಜವಾದ ಸ್ವಾತಂತ್ರ್ಯ’ ಹೇಳಿಕೆಗೆ ಮೋಹನ್ ಭಾಗವತ್ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ

Update: 2025-01-15 13:33 IST

ರಾಹುಲ್‌ ಗಾಂಧಿ (PTI)

ಹೊಸದಿಲ್ಲಿ: ರಾಮ ಮಂದಿರದ ಪ್ರತಿಷ್ಠಾಪನೆಯ ನಂತರ ಭಾರತಕ್ಕೆ “ನಿಜವಾದ ಸ್ವಾತಂತ್ರ್ಯ” ಸಿಕ್ಕಿದೆ ಎಂಬ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ್ರೋಹಕ್ಕೆ ಸಮಾನವಾಗಿದೆ ಮತ್ತು ಇದು ಪ್ರತಿಯೋರ್ವ ಭಾರತೀಯನಿಗೆ ಮಾಡಿದ ಅವಮಾನವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.

ದಿಲ್ಲಿಯಲ್ಲಿ ಕಾಂಗ್ರೆಸ್ ನ ನೂತನ ಪ್ರಧಾನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ರಾಹುಲ್ ಗಾಂಧಿ, 1947ರಲ್ಲಿ ಭಾರತವು ನಿಜವಾದ ಸ್ವಾತಂತ್ರ್ಯವನ್ನು ಗಳಿಸಲಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಯು ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ, ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಮಾಡಿದ ಅವಮಾನವಾಗಿದೆ ಮತ್ತು ನಮ್ಮ ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಹೇಳಿದ್ದಾರೆ.

ಮೋಹನ್ ಭಾಗವತ್ ಅವರು ಸ್ವತಂತ್ರ ಚಳುವಳಿ, ಸಂವಿಧಾನದ ಬಗ್ಗೆ ಪ್ರತಿ 2-3 ದಿನಗಳಿಗೊಮ್ಮೆ ನಿರ್ಭಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರು ನಿನ್ನೆ ಹೇಳಿದ್ದು ದೇಶದ್ರೋಹವಾಗಿದೆ. ಏಕೆಂದರೆ ಅದು ಸಂವಿಧಾನ ಅಸಿಂಧು ಮತ್ತು ಬ್ರಿಟಿಷರ ವಿರುದ್ಧದ ಹೋರಾಟ ಅಸಿಂಧು ಎಂದು ಹೇಳುತ್ತದೆ. ಇದನ್ನು ಸಾರ್ವಜನಿಕವಾಗಿ ನಿರ್ಭಯವಾಗಿ ಹೇಳಿದ್ದಾರೆ. ಬೇರೆ ಯಾವುದೇ ದೇಶದಲ್ಲಾಗಿರುತ್ತಿದ್ದರೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿತ್ತು ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ ಎಂದು ಹೇಳುವುದು ಪ್ರತಿಯೋರ್ವ ಭಾರತೀಯನಿಗೆ ಮಾಡಿದ ಅವಮಾನವಾಗಿದೆ. ನಾವು ಈ ಅಸಂಬದ್ಧತೆಯನ್ನು ಕೇಳುವುದನ್ನು ನಿಲ್ಲಿಸುವ ಸಮಯ ಬಂದಿದೆ. ಬಿಜೆಪಿ ಮತ್ತು ಆರೆಸ್ಸೆಸ್ ಪ್ರತಿಪಕ್ಷದ ನಾಯಕರ ವಿರುದ್ಧ ತನಿಖಾ ಸಂಸ್ಥೆಗಳನ್ನು ಬಳಸುತ್ತಿರುವ ಕಠಿಣ ಸಂದರ್ಭಗಳಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಈ ಸಿದ್ಧಾಂತಗಳ ಹೋರಾಟದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News