ವಿಮಾನ ಅಪಘಾತಕ್ಕೀಡಾದ ಸಂದರ್ಭ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಗೋಚರತೆ ಕಳಪೆಯಾಗಿತ್ತು: ಕೇಂದ್ರ ವಿಮಾನಯಾನ ಸಚಿವ
Photo credit: PTI
ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾದ ಸಂದರ್ಭದಲ್ಲಿ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಗೋಚರತೆ ಕಳಪೆಯಾಗಿತ್ತು ಎಂದು ಕೇಂದ್ರ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.
ಅಪಘಾತದಲ್ಲಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಇನ್ನೂ ನಾಲ್ವರು ಮೃತಪಟ್ಟಿದ್ದಾರೆ. ಘಟನೆ ಕುರಿತು ತನಿಖೆ ನಡೆಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ತಂಡಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿವೆ ಎಂದು ಅವರು ಹೇಳಿದರು.
ವಿಮಾನ ಇಳಿಯಲು ಪ್ರಯತ್ನಿಸುತ್ತಿದ್ದ ವೇಳೆ ಗೋಚರತೆ ಸಮರ್ಪಕವಾಗಿರಲಿಲ್ಲ ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಬಾರಾಮತಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ ರನ್ವೇ ದೃಷ್ಟಿಗೋಚರವಾಗಿದೆಯೇ ಎಂದು ಪೈಲಟ್ಗೆ ಪ್ರಶ್ನಿಸಿದ್ದು, ಪೈಲಟ್ ನಕಾರಾತ್ಮಕ ಪ್ರತಿಕ್ರಿಯೆ ನೀಡಿದ ನಂತರ ವಿಮಾನವು ಸುತ್ತು ಹಾಕಿದೆ ಎಂದು ನಾಯ್ಡು ವಿವರಿಸಿದರು.
ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಹಾಗೂ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ದಿಲ್ಲಿಯಿಂದ ಪುಣೆಗೆ ತೆರಳಿದ್ದಾರೆ.