×
Ad

ಮಾಲೆಗಾಂವ್ ಸ್ಫೋಟ ಪ್ರಕರಣ : ಪ್ರಜ್ಞಾಠಾಕೂರ್ ಸೇರಿದಂತೆ 7 ಆರೋಪಿಗಳ ಖುಲಾಸೆ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ ಕುಟುಂಬ

Update: 2025-09-09 19:42 IST

Photo | NDTV

ಮುಂಬೈ: 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಇತರ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ ಎನ್ಐಎ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೃತರ ಕುಟುಂಬಸ್ಥರು  ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

ನಿಸಾರ್ ಅಹ್ಮದ್ ಸಯ್ಯದ್ ಬಿಲಾಲ್ ಮತ್ತು ಇತರ ಐವರು ವಕೀಲ ಮತೀನ್ ಶೇಖ್ ಮೂಲಕ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ವಿಶೇಷ ನ್ಯಾಯಾಲಯದ ಜುಲೈ 31ರ ತೀರ್ಪನ್ನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

2008ರ ಸೆಪ್ಟೆಂಬರ್ 29ರ ರಾತ್ರಿ ಮಾಲೆಗಾಂವ್‌ನ ಭಿಕ್ಕು ಚೌಕ್ ಬಳಿ ನಡೆದ ಸ್ಫೋಟದಲ್ಲಿ ಆರು ಜನರು ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಜನದಟ್ಟಣೆಯ ಪ್ರದೇಶದಲ್ಲಿ ಮೋಟಾರ್ ಸೈಕಲ್‌ಗೆ ಐಇಡಿ ಅಳವಡಿಸಲಾಗಿತ್ತು.

ಆರಂಭದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ATS) ತನಿಖೆ ನಡೆಸುತ್ತಿದ್ದ ಈ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿತ್ತು. ತನಿಖೆಯ ವೇಳೆ ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್, ಮೇಜರ್ ರಮೇಶ್ ಉಪಾಧ್ಯಾಯ, ಅಜಯ್ ರಹಿರ್ಕರ್, ಸಮೀರ್ ಕುಲಕರ್ಣಿ, ಸುಧಾಕರ್ ದ್ವಿವೇದಿ ಮತ್ತು ಸುಧಾಕರ್ ಚತುರ್ವೇದಿ ಮೇಲೆ ಹಿಂದುತ್ವ ಸಿದ್ಧಾಂತಕ್ಕೆ ಸಂಬಂಧಿಸಿದ ವ್ಯಾಪಕ ಪಿತೂರಿಯ ಭಾಗವಾಗಿ ಸ್ಫೋಟವನ್ನು ರೂಪಿಸಿ ಕಾರ್ಯಗತಗೊಳಿಸಿದ ಆರೋಪವನ್ನು ಹೊರಿಸಲಾಗಿತ್ತು. ಆ ಬಳಿಕ ಎಲ್ಲಾ ಆರೋಪಿಗಳನ್ನು ಎನ್ಐಎ ನ್ಯಾಯಾಲಯ ಖುಲಾಸೆಗೊಳಿಸಿತ್ತು.

2011ರಲ್ಲಿ ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸಲಾಗಿತ್ತು. ಸಾಧ್ವಿ ಪ್ರಜ್ಞಾ ಅವರನ್ನು ಅಕ್ಟೋಬರ್ 2008ರಲ್ಲಿ ಬಂಧಿಸಲಾಗಿತ್ತು. ಆ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News