×
Ad

ನನ್ನ ಹೇಳಿಕೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ: ಮಾಧ್ಯಮಗಳ ವಿರುದ್ಧ ಹರಿಹಾಯ್ದ ಶಶಿ ತರೂರ್

Update: 2025-02-27 22:45 IST

 ಶಶಿ ತರೂರ್ | PC : PTI 

ತಿರುವನಂತಪುರಂ: ನಾನು ಇತ್ತೀಚೆಗೆ ಮಾಧ್ಯಮ ಸಂಸ್ಥೆಯೊಂದರ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ ಎಂದು ಗುರುವಾರ ಕಾಂಗ್ರೆಸ್ ನಾಯಕ ಶಶಿ ತರೂರ್ ಮಾಧ್ಯೀಮಗಳ ವಿರುದ್ಧ ಹರಿಹಾಯ್ದಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಶಶಿ ತರೂರ್, ನಾನು ಮಾಧ್ಯಮವೊಂದಕ್ಕೆ ನೀಡಿದ್ದ ಪಾಡ್ ಕಾಸ್ಟ್ ಸಂದರ್ಶನವನ್ನು ತಪ್ಪಾಗಿ ಹಾಗೂ ಆಧಾರರಹಿತವಾಗಿ ವ್ಯಾಖ್ಯಾನಿಸಿರುವ ಮಾಧ್ಯಮಗಳು, ನಾನು ಪರ್ಯಾಯ ರಾಜಕೀಯ ಆಯ್ಕೆಗಳ ಅನ್ವೇಷಣೆಯಲ್ಲಿದ್ದೇನೆ ಎಂದು ಬಿಂಬಿಸಿವೆ. ಆದರೆ, ನಾನು ಆ ಹೇಳಿಕೆಯನ್ನು ಸಾಹಿತ್ಯಿಕ ಆಯ್ಕೆಯ ಹಿನ್ನೆಲೆಯಲ್ಲಿ ನೀಡಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಕೇರಳದಲ್ಲಿ ನಾಯಕತ್ವದ ಕೊರತೆ ಅನುಭವಿಸುತ್ತಿದ್ದಾರೆ ಎಂದು ನಾನು ಹೇಳಿದ್ದೇನೆ ಎಂದು ಮಾಧ್ಯಮಗಳು ನನ್ನ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಿವೆ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯೋಜಿಸಿರುವ ಸಭೆಯು ಈ ವರ್ಷ ಹಾಗೂ ಮುಂದಿನ ವರ್ಷ ನಡೆಯಲಿರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷ ಅನುಸರಿಸಬೇಕಾದ ಚುನಾವಣಾ ತಂತ್ರಗಳನ್ನು ಚರ್ಚಿಸುವ ಉದ್ದೇಶ ಹೊಂದಿದೆ ಎಂದು ಶಶಿ ತರೂರ್ ಸಮರ್ಥಿಸಿಕೊಂಡಿದ್ದರೂ, ಅವರ ಹೇಳಿಕೆಯು ಸಭೆಯಲ್ಲಿ ಪ್ರಸ್ತಾಪಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಲ್ಲದೆ, ಜನರನ್ನು ಸೆಳೆಯುವ ಸಾಮರ್ಥ್ಯ ಹೊಂದಿರುವ ಶಶಿ ತರೂರ್ ಅವರಿಗೆ ರಾಜ್ಯ ಕಾಂಗ್ರೆಸ್ ಚಟುವಟಿಕೆಯಲ್ಲಿ ಇನ್ನೂ ಹೆಚ್ಚಿನ ಮಹತ್ವದ ಹೊಣೆ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ವಿಶೇಷವಾಗಿ ರಾಷ್ಟ್ರ ಮಟ್ಟದಲ್ಲಿ ಪಕ್ಷದ ಮಹತ್ವವನ್ನು ಕಾಯ್ದುಕೊಳ್ಳಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ಕಾಂಗ್ರೆಸ್ ಗೆ ಮುಖ್ಯವಾಗಿರುವುದರಿಂದ, ಶಶಿ ತರೂರ್ ಗೆ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಜವಾಬ್ದಾರಿ ದೊರೆಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News