ಬಾಲಸೋರ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ಒಡಿಶಾ ವಿಧಾನಸಭೆಯ ಹೊರಗೆ ಪ್ರತಿಭಟನೆ : ಪೊಲೀಸರಿಂದ ಅಶ್ರುವಾಯು, ಜಲಫಿರಂಗಿ ಪ್ರಯೋಗ
Photo | indiatoday
ಭುವನೇಶ್ವರ : ಬಾಲಸೋರ್ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನ ಬಿಎಡ್ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬುಧವಾರ ಒಡಿಶಾ ವಿಧಾನಸಭೆ ಹೊರಗೆ ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಜನರು ಪ್ರತಿಭಟನೆಯನ್ನು ನಡೆಸಿದ್ದು, ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಬಳಸಿದ್ದಾರೆ.
ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಪ್ರತಿಭಟನೆಗೆ ಕರೆ ನೀಡಿತ್ತು. ಒಡಿಶಾ ವಿಧಾನಸಭೆ ಹೊರಗೆ ಪ್ರತಿಭಟನಾಕಾರರು ಬ್ಯಾರಿಕೇಡ್ ಅನ್ನು ಮುರಿಯಲು ಪ್ರಯತ್ನಿಸಿದ್ದರು. ಅವರನ್ನು ಪೊಲೀಸರು ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಬಳಸಿ ಚದುರಿಸಿದ್ದಾರೆ.
ಬಾಲಸೋರ್ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನ ಬಿಎಡ್ ವಿದ್ಯಾರ್ಥಿನಿ ಪ್ರಾಧ್ಯಾಪಕನೋರ್ವನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಘಟನೆಯ ನಂತರ ಕಾಲೇಜಿನ ಪ್ರಾಂಶುಪಾಲ ದಿಲ್ಲಿಪ್ ಕುಮಾರ್ ಘೋಷ್ ಮತ್ತು ಆರೋಪಿ ಸಮೀರ ಕುಮಾರ್ ಸಾಹೂನನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಸರಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಿಜೆಡಿ ನಾಯಕ ದೇಬಿ ಪ್ರಸಾದ್ ಮಿಶ್ರಾ ಆಗ್ರಹಿಸಿದ್ದಾರೆ.