ಕೆಂಪು ಕೋಟೆ ಬಳಿ ಸ್ಫೋಟ ಪ್ರಕರಣ : ಮೃತರ ಸಂಖ್ಯೆ 12ಕ್ಕೆ ಏರಿಕೆ
Update: 2025-11-11 11:49 IST
Photo credit: PTI
ಹೊಸದಿಲ್ಲಿ : ದಿಲ್ಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಟ್ರಾಫಿಕ್ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಪ್ರಬಲ ಸ್ಫೋಟ ಸಂಭವಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರು ಮಂಗಳವಾರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಮತ್ತು ಸ್ಫೋಟಕ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಯುತ್ತಿದೆ.
ರಾಷ್ಟ್ರ ರಾಜಧಾನಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೆ ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್ನಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.