ಪಣಜಿ | ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಉಮರ್ ಖಾಲಿದ್ ಪರ ಫಲಕ ಪ್ರದರ್ಶನ: ಇಬ್ಬರು ಯುವಕರು ಪೊಲೀಸ್‌ ವಶಕ್ಕೆ

Update: 2026-07-26 12:17 IST

ಉಮರ್ ಖಾಲಿದ್‌ (File Photo: PTI)

ಪಣಜಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬಳಿಕ ಸಂಭ್ರಮಾಚರಣೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ ವ್ಯಕ್ತಪಡಿಸಿದ ಆರೋಪದಲ್ಲಿ ಪಣಜಿಯಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020ರಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಉಮರ್ ಖಾಲಿದ್‌ ಜೈಲಿನಲ್ಲಿದ್ದಾರೆ.

NEET ಪೇಪರ್ ಸೋರಿಕೆ ವಿಚಾರದಲ್ಲಿ ಕಾಕ್ರೋರ್ಚ್ ಜನತಾ ಪಾರ್ಟಿಯ ನೇತೃತ್ವದಲ್ಲಿ ದೇಶವ್ಯಾಪಿ ನಡೆದ ಪ್ರತಿಭಟನೆ ಬಳಿಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ ಮುಂಬೈನ ಆಝಾದ್ ಮೈದಾನದಲ್ಲಿ ಸಂಭ್ರಮಾಚರಣೆ ನಡೆದಿತ್ತು. ಈ ವೇಳೆ ದಾನಿಶ್ ಎಂಬ ಯುವಕನೊಬ್ಬ ಉಮರ್‌ ಖಾಲಿದ್‌ ಪರ ಫಲಕವನ್ನು ಪ್ರದರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳು ‌ದಾನಿಶ್ ನನ್ನು ಪ್ರಶ್ನಿಸಿದಾಗ ಉಮರ್ ಖಾಲಿದ್‌ನನ್ನು ಜೈಲಿನಿಂದ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾನೆ ಎಂದು ಹೇಳಲಾಗಿದೆ. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದ ಹಿರಿಯ ಪೊಲೀಸ್ ಅಧಿಕಾರಿ ದಾನಿಶ್‌ ನನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆಝಾದ್ ಮೈದಾನದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸ್ ಪ್ರಧಾನ ಕಚೇರಿಗೆ ಮೆರವಣಿಗೆ ನಡೆಸಿದರು.

ಪೊಲೀಸರು ದಾನಿಶ್ ಪರ ಘೋಷಣೆಗಳನ್ನು ಕೂಗುತ್ತಿದ್ದ ಗುಂಪನ್ನು ನಿಯಂತ್ರಿಸುತ್ತಿದ್ದ ವೇಳೆ ಸುದಿನ್ ದಳವಿ ಎಂಬ ಮತ್ತೋರ್ವನನ್ನು ವಶಕ್ಕೆ ಪಡೆಯಲಾಗಿದೆ. ಆತ ಕೂಡ ಖಾಲಿದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಲ್ಲದೆ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News