ಶೀಘ್ರವೇ ಆರೋಪಿಗಳ ಬಂಧನ: ಡಾ.ಜಿ.ಪರಮೇಶ್ವರ್
ಬೆಳಗಾವಿ, ಜ.5: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹಂತಕರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿ ಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯು ಚುರುಕುಗೊಂಡಿದ್ದು, ಶೀಘ್ರವೇ ಹಂತಕರನ್ನು ಬಂಧಿಸಲಾಗುವುದು ಎಂದರು.
ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್, ಗೋವಿಂದ ಪನ್ಸಾರೆ ಹತ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಹಾಗೂ ಗೋವಾ ಸರಕಾರ ನಡೆಸುತ್ತಿರುವ ತನಿಖೆಗಿಂತ ನಾವು ಮುಂದಿದ್ದೇವೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಸಮ ಹಾಗೂ ಬೆಸ ಸಂಖ್ಯೆ ವಾಹನಗಳ ಸಂಚಾರಕ್ಕೆ ಸಂಬಂಧಿಸಿದಂತೆ ಚಿಂತನೆ ನಡೆಸಲಾಗಿದೆ. ಪ್ರಸ್ತುತ ದೆಹಲಿ ಸರಕಾರ ಈ ಮಾದರಿಯನ್ನು ಅನುಸರಿಸುತ್ತಿದ್ದು, ಅಲ್ಲಿ ಯಶಸ್ವಿಯಾದರೆ ರಾಜ್ಯ ದಲ್ಲಿಯೂ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.