ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಹೊಸ ಯೋಜನೆ; ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ
ಬೆಂಗಳೂರು, ಜ. 11: ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ)ಗಳ ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ ಶಿಕ್ಷಣ ನೀಡುವ ‘ಹೊಸ ಯೋಜನೆ’ಯನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದ ತನ್ನ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಶಿಕ್ಷಣ ವ್ಯವಸ್ಥೆಯಿಂದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ನಿರುದ್ಯೋಗಿಗಳಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಉದ್ಯೋಗ ಆಧಾರಿತ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ ಎಂದರು.
ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಆಗುವಂತೆ ಶಿಕ್ಷಣ ಹಾಗೂ ಉದ್ಯೋಗ ತರಬೇತಿ ನೀಡುವ ಕೋರ್ಸ್ಗಳನ್ನು ಆರಂಭಿಸಲು ಸಮಾಲೋಚನೆ ನಡೆಯುತ್ತಿದೆ ಎಂದ ಆಂಜನೇಯ, ಕೌಶಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಬ್ಸಿಡಿ ಹೆಚ್ಚಳ:
ಅಂಬೇಡ್ಕರ್ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮಗಳಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ನಿರುದ್ಯೋಗಿಗಳಿಗೆ ಒದಗಿಸಲಾಗುತ್ತಿರುವ ವಿವಿಧ ಸಾಲ ಸೌಲಭ್ಯಗಳ ಸಬ್ಸಿಡಿಯನ್ನು ಶೇ.35ರಿಂದ ಶೇ.60ಕ್ಕೆ ಏರಿಸಲು ಉದ್ದೇಶಿಸಿದ್ದು, ಈ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು. ಎರಡು ಲಕ್ಷ ರೂ.ನಿಂದ 6ಲಕ್ಷ ರೂ.ಗಳ ವರೆಗೆ ಸಾಲಕ್ಕೆ ಪ್ರಸ್ತುತ ಶೇ.35ರಷ್ಟು ಸಬ್ಸಿಡಿ ನೀಡುತ್ತಿದ್ದು, ಅದನ್ನು ಶೇ.60ರಷ್ಟಕ್ಕೆ ಹೆಚ್ಚಿ ಸಬೇಕೆಂದು ಮನವಿ ಮಾಡಲಾಗಿದೆ. ಅದೇ ರೀತಿಯಲ್ಲಿ ಆರು ಲಕ್ಷ ರೂ.ನಿಂದ 15 ಲಕ್ಷ ರೂ.ಗಳ ವರೆಗಿನ ಸಾಲಕ್ಕೆ ಶೇ.70 ರಷ್ಟು ಸಬ್ಸಿಡಿ ನೀಡಲು ಉದ್ದೇಶಿಸಲಾಗಿದೆ ಎಂದು ಆಂಜನೇಯ ತಿಳಿಸಿದರು.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ’ಗೆ ಸಂಬಂಧಿಸಿದ ಮುಖ್ಯಮಂತ್ರಿಯ ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿಯ ಸಭೆ ಜ.13ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ದಲಿತರ ಮೇಲಿನ ಜಾತಿ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ, ದೇವಸ್ಥಾನ ಪ್ರವೇಶ ನಿರಾಕರಣೆ ದೂರುಗಳ ಬಗ್ಗೆ ಅಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
ಪರಿಶಿಷ್ಟರ ಉಪ ಯೋಜನೆಯನ್ವಯ(ಎಸೆಸ್ಟಿಪಿ/ಟಿಎಸ್ಪಿ) ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ಸದ್ಬಳಕೆಯ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದೇ ವೇಳೆ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದ ಅವರು, ಇಲಾಖೆಯಿಂದ ಹೊಸ ಯೋಜನೆ ರೂಪಿಸುವ ಸಂಬಂಧ ಚರ್ಚೆಸಲಾಗುವುದು ಎಂದರು.
ಹಣ ಬಿಡುಗಡೆ: ರಾಜ್ಯದ ಎಲ್ಲ ವಿವಿಗಳಲ್ಲಿ ಎಸ್ಸಿ-ಎಸ್ಟಿ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಪ್ರತಿ ವಿವಿಗೆ ತಲಾ 5 ಕೋಟಿ ರೂ.ನಂತೆ ಒಟ್ಟು 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದ ಅವರು, ಪರಿಶಿಷ್ಟ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ನಿರಾಕರಿಸದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.