ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶ ನಿಷೇಧ ಪರ ಸುಪ್ರೀಂಗೆ ಅಫಿದಾವಿಟ್ ಸಲ್ಲಿಸಲಿರುವ ಟಿಡಿಬಿ
ಹೊಸದಿಲ್ಲಿ, ಜ.13: ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನಿಷೇಧಿಸಿರುವುದು ಮಹಿಳೆಯರ ಸಂವಿಧಾನಿಕ ಹಕ್ಕಿನ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೆ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ದೇವಸ್ಥಾನದಲ್ಲಿ ಅನಾದಿ ಕಾಲದಿಂದಲೂ ಆಚರಣೆಯಲ್ಲಿರುವ ನಿಯಮದಲ್ಲಿ ಬದಲಾವಣೆ ಅಸಾಧ್ಯ ಎಂದು ಸುಪ್ರೀಂ ಕೋರ್ಟ್ಗೆ ಅಫಿದಾವಿಟ್ ಸಲ್ಲಿಸಲು ನಿರ್ಧರಿಸಿದೆ.
ದೇವಸ್ಥಾನಕ್ಕೆ 10ರಿಂದ 50 ವರ್ಷದೊಳಗಿನ ವಯೋಮಿತಿಯ ಮಹಿಳೆಯರಿಗೆ ಪ್ರವೇಶ ನಿಷೇಧ ಈಗ ಇರುವ ನಿಯಮ. ಅಂದರೆ ಋತುಮತಿಯಾದ ನಂತರ ಹೆಣ್ಣು ಮಕ್ಕಳಿಗೆ ದೇವಾಲಯದೊಳಕ್ಕೆ ಪ್ರವೇಶವಿಲ್ಲ. ಮುಟ್ಟುನಿಂತ ಮಹಿಳೆಯರಿಗಷ್ಟೇ ಪ್ರವೇಶ. ಈ ನಿಯಮದಲ್ಲಿ ಬದಲಾವಣೆ ಅಸಾಧ್ಯ ಎಂಬ ನಿಲುವಿಗೆ ಟಿಡಿಬಿ ಅಂಟಿಕೊಂಡಿದೆ.
ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವಂತೆ ನಿರ್ದೇಶಿಸಬೇಕು ಎಂದು ಯುವ ವಕೀಲರ ಸಂಘ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ದೇವಸ್ಥಾನದ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡು "ಮಹಿಳೆಯರಿಗೆ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸುವುದು ಸಾಂವಿಧಾನಿಕ ಉಲ್ಲಂಘನೆ " ಎಂದು ಹೇಳಿತ್ತು.