×
Ad

ಲೋಡ್‌ಶೆಡ್ಡಿಂಗ್ ಇಲ್ಲ

Update: 2016-03-10 23:58 IST

ಬೆಂಗಳೂರು, ಮಾ.10: ಶರಾವತಿ ಜಲವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ದುರಂತದ ಹೊರತಾಗಿಯೂ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗದಂತೆ ಅಗತ್ಯವಾದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಲಭ್ಯವಿರುವ ಎಲ್ಲ ಮೂಲಗಳಿಂದ ಅಗತ್ಯವಿರುವಷ್ಟು ಪ್ರಮಾಣದಲ್ಲಿ ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಅಗತ್ಯವಿಲ್ಲ. ಆದ್ದರಿಂದ, ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಬೇಸಿಗೆಯನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದು ಶಿವಕುಮಾರ್ ಹೇಳಿದರು. ಕೇಂದ್ರ ಸರಕಾರ ರಾಜ್ಯಕ್ಕೆ ನೀಡಿದ್ದ 319 ಮೆಗಾವ್ಯಾಟ್ ವಿದ್ಯುತ್‌ನ್ನು ಖರೀದಿಸದೆ ತಿರಸ್ಕರಿಸಿದ್ದು ನಿಜ. ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಯೂನಿಟ್ ವಿದ್ಯುತ್‌ನ್ನು 5.08 ರೂ.ಗಳಿಗೆ ಖರೀದಿಸಲಾಗುತ್ತಿದೆ. ಆದರೆ, ಕೇಂದ್ರ ಸರಕಾರದಿಂದ ಖರೀದಿಸುವ ವಿದ್ಯುತ್ ಪ್ರತಿ ಯೂನಿಟ್‌ಗೆ 5.82 ರೂ.ಆಗುತ್ತದೆ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರಕ್ಕೆ 5.82 ರೂ.ನೀಡಿ ವಿದ್ಯುತ್ ಖರೀದಿ ಮಾಡಿದರೆ, ಸಕ್ಕರೆ ಕಾರ್ಖಾನೆಗಳು ಅಷ್ಟೇ ಮೊತ್ತವನ್ನು ನೀಡಬೇಕಾಗುತ್ತದೆ. ಆದುದರಿಂದ, ಕೇಂದ್ರದಿಂದ ವಿದ್ಯುತ್‌ನ್ನು ಖರೀದಿ ಮಾಡಿಲ್ಲ. ಸಂಸತ್ತಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯದ ವಿದ್ಯುತ್ ಖರೀದಿ ಪ್ರಕ್ರಿಯೆ ಕುರಿತು ಮಾಡಿರುವ ಆರೋಪವು ಸತ್ಯಕ್ಕೆ ದೂರವಾದದ್ದು ಎಂದು ಅವರು ಹೇಳಿದರು.

ದಾಮೋದರ್ ವ್ಯಾಲಿ ನಿಗಮದಿಂದ ಈ ಹಿಂದೆ ಒಪ್ಪಂದ ಮಾಡಿಕೊಂಡಂತೆ ಸುಮಾರು 400 ಮೆಗಾವ್ಯಾಟ್ ವಿದ್ಯುತ್ತನ್ನು ಪ್ರತಿ ಯೂನಿಟ್‌ಗೆ 4.50 ರೂ.ಗಳಿಗೆ ಖರೀದಿಸಲಾಗುತ್ತಿದೆ. ಈ ಹಿಂದೆ 100 ಮೆಗಾವ್ಯಾಟ್ ಬಂದಿದ್ದು, ಇನ್ನೂ 200 ಮೆಗಾವ್ಯಾಟ್ ಬರುತ್ತಿದೆ. ರಾಜ್ಯದ ರೈತರಿಗೆ 7 ಗಂಟೆ ನಿರಂತರವಾಗಿ ವಿದ್ಯುತ್ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಶರಾವತಿ ವಿದ್ಯುತ್ ಘಟಕ: ಶರಾವತಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಅವಘಡಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ತಾಂತ್ರಿಕ ಸಮಿತಿಯನ್ನು ರಚಿಸಲಾಗಿದೆ. ಎಲ್ಲವನ್ನೂ ವೀಡಿಯೊ ಚಿತ್ರೀಕರಣ ಮಾಡಲಾಗಿದೆ ಎಂದು ಅವರು ಹೇಳಿದರು. ಈ ಘಟನೆಯಲ್ಲಿ ಅಧಿಕಾರಿಗಳ ಲೋಪವಿದೆ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸ್ಥಳೀಯ ಶಾಸಕರಾಗಿರುವುದರಿಂದ ಅವರಿಗೆ ಕೆಲ ಮಾಹಿ ತಿಗಳು ಇರಬಹುದು. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಲ್‌ಇಡಿ ಬಲ್ಬ್ ಹಂಚಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ. ಆರು ಕೋಟಿ ಬಲ್ಬ್‌ಗಳಿಗೆ ಟೆಂಡರ್ ಕರೆಯಲಾಗಿದ್ದು, ಗುತ್ತಿಗೆ ಕೊಟ್ಟ ನಂತರ ಪ್ರತಿ ಮನೆಗೂ ಬಲ್ಬ್‌ಗಳನ್ನು ಪೂರೈಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಸುಳ್ಯ ತಾಲೂಕಿನ ನಾಗರಿಕರೊಬ್ಬರು ಪದೇ ಪದೇ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ಇದನ್ನು ಕಳೆದ ಆರು ತಿಂಗಳಿನಿಂದ ತಾನು ಹಾಗೂ ನಮ್ಮ ಇಲಾಖೆಯ ಅಧಿಕಾರಿಗಳು ಸಹಿಸಿಕೊಂಡಿದ್ದಾರೆ. ಅಂತಿಮವಾಗಿ ಪೊಲೀಸರಿಗೆ ದೂರು ನೀಡಬೇಕಾಯಿತು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News