×
Ad

ಕುಡಿಯುವ ನೀರಿನ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಸೊರಕೆ

Update: 2016-03-11 23:33 IST

ಉಡುಪಿ, ಮಾ.11: ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕುಡಿಯುವ ನೀರು ಸರಬರಾಜು ಮಾಡುವ ಕುರಿತು ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಗಿಸಿ, ನೀರಿನ ಸಮಸ್ಯೆ ಕಂಡುಬರದಂತೆ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಸೂಚನೆ ನೀಡಿದ್ದಾರೆ.

 ಉಡುಪಿ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಕುಡಿಯುವ ನೀರು ಹಾಗೂ ನಿವೇಶನ ಹಂಚಿಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ ವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 29 ಸ್ಥಳಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಅಗತ್ಯ ಕಾಮಗಾರಿಗಾಗಿ ಶಾಸಕರ ಕಾರ್ಯಪಡೆ ಯೋಜನೆಯಲ್ಲಿ ಕೈಗೊಂಡಿರುವ 40 ಲಕ್ಷ ರೂ. ವೆಚ್ಚದ ಕಾಮಗಾರಿಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು ಮತ್ತು ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪೂರ್ಣಗೊಂಡ ನೀರು ಸರಬರಾಜು ಕಾಮಗಾರಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ನೀಡುವಂತೆ ಸಚಿವರು ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

ವಿದ್ಯುತ್ ಬಿಲ್ 480ರೂ.ಗಿಂತ ಅಧಿಕ ಬಂದ ಕಾರಣ ಜಿಲ್ಲೆಯಲ್ಲಿ 1,604 ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿದ್ದು, 9,242 ಹೊಸ ಪಡಿತರ ಚೀಟಿಗಳು ಆನ್‌ಲೈನ್‌ನಲ್ಲಿ ಬಾಕಿ ಇದ್ದು ಶೀಘ್ರದಲ್ಲಿ ವಿತರಿಸಲಾಗುವುದು. ಅಲ್ಲದೆ ಜಿಲ್ಲೆಯಲ್ಲಿ ಇಡೀ ರಾಜ್ಯದಲ್ಲೇ ಪ್ರಥಮ ಬಾರಿಗೆ ಪಾಯಿಂಟ್ ಆಫ್ ಸೇಲ್ ಮೆಷಿನ್ ಅಳವಡಿಸಲಾಗುತ್ತಿದೆ. ಈ ಮೂಲಕ ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ತರಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಯೋಗೇಶ್ವರ್ ಹೇಳಿದರು.

ಹೆಚ್ಚಿನ ವಿದ್ಯುತ್ ಬಿಲ್‌ನಿಂದ ರದ್ದಾಗಿರುವ ಬಿಪಿಎಲ್ ಕುಟುಂಬಗಳಿಂದ ಪುನರ್ ಪರಿಶೀಲನಾ ಅರ್ಜಿಗಳನ್ನು ಪಡೆದು, ಪುನರ್ ವಿಮರ್ಶೆ ಮಾಡಿ ಕಾರ್ಡ್ ನೀಡುವಂತೆ ಸೂಚಿಸಿದ ಸಚಿವರು, ಎಲ್ಲ ಗ್ರಾಪಂಗಳ ಪಿಡಿಒಗಳು ಈ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ ವಸತಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಏಕಗವಾಕ್ಷಿ ಯೋಜನೆ ಮೂಲಕ ಅಗತ್ಯವಿರುವ ಎಲ್ಲ ಅನುಮತಿಗಳನ್ನು ನೀಡಿ, ವಸತಿ ರಹಿತರಿಗೆ ಶೀಘ್ರದಲ್ಲಿ ನಿವೇಶನಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಫಲಾನುಭವಿಗಳ ಪಟ್ಟಿಯನ್ನು ಗ್ರಾಮ ಸಭೆಯಲ್ಲಿಯೇ ನಿರ್ಧರಿಸಿ, ಆಯ್ಕೆಗೊಂಡವರ ಪಟ್ಟಿಯನ್ನು ಪಂಚಾಯತ್‌ನ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಹಾಗೂ ಕಂದಾಯ ನಿರೀಕ್ಷಕರಿಗೆ ಪಟ್ಟಿಯನ್ನು ಕಳುಹಿಸಿ ಅನುಮೋದನೆ ಪಡೆಯಬಾರದೆಂದು ಅವರು ತಿಳಿಸಿದರು.

ಕರಾವಳಿ ಭಾಗದ ಗ್ರಾಪಂಗಳಲ್ಲಿ ನಿವೇಶನ ನೀಡಲು ಜಾಗ ಇಲ್ಲದಿದ್ದಲ್ಲಿ ಸಮೀಪದ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ನೀಡುವಂತೆ ಹಾಗೂ ನಿವೇಶನ ಕೋರಿ ಹೊಸ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಚಿವರು ತಿಳಿಸಿದರು. ಪಡುಬಿದ್ರೆಯಲ್ಲಿ ಕೊರಗ ಜನಾಂಗದವರಿಗೆ ಮಂಜೂರಾಗಿರುವ ನಿವೇಶನಗಳನ್ನು ಆದಷ್ಟು ಶೀಘ್ರದಲ್ಲಿ ಒದಗಿಸಬೇಕು ಹಾಗೂ ವಸತಿ ಯೋಜನೆಗಳ ಅನುಷ್ಠಾನದಲ್ಲಿ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಎಲ್ಲ್ಲ ಗ್ರಾಪಂ ಪಿಡಿಒಗಳು ತಮ್ಮ ಗ್ರಾಮ ವ್ಯಾಪ್ತಿಯ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಶೀಘ್ರದಲ್ಲಿ ಪ್ರಕಟಿಸುವಂತೆ ಜಿಪಂ ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚಿಸಿದರು. ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News