×
Ad

ರಾಜ್ಯಾದ್ಯಂತ 11 ಸಾವಿರ ಮನೆಗಳ ನಿರ್ಮಾಣ: ಪರಮೇಶ್ವರ್

Update: 2016-03-17 23:36 IST

ಬೆಂಗಳೂರು, ಮಾ.17: ರಾಜ್ಯಾದ್ಯಂತ ಪೊಲೀಸ್‌ಸಿಬ್ಬಂದಿಗೆ ‘ಪೊಲೀಸ್ ಗೃಹ ಯೋಜನೆ- 2020’ಯಡಿಯಲ್ಲಿ 1,818 ಕೋಟಿ ರೂ.ವೆಚ್ಚದಲ್ಲಿ 11 ಸಾವಿರ ಮನೆಗಳನ್ನು ನಿರ್ಮಿಸಲು ಸರಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಕೆ.ಆರ್.ಪುರದಲ್ಲಿ ನಿರ್ಮಿಸುತ್ತಿರುವ 396 ವಸತಿ ಸಮುಚ್ಚಯಗಳ ನೂತನ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
 ಮೊದಲನೆ ಹಂತದಲ್ಲಿ 2,786 ವಸತಿಗೃಹಗಳನ್ನು 393 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದು, ಮುಕ್ತಾಯದ ಹಂತದಲ್ಲಿದೆ. ಎರಡನೆ ಹಂತದಲ್ಲಿ 4,016 ವಸತಿ ಗೃಹಗಳನ್ನು 601 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವುದು. ಬೆಂಗಳೂರಿನ ಸಂಪಿಗೆಹಳ್ಳಿ, ಆಡುಗೋಡಿ, ಕೆ.ಆರ್.ಪುರ, ಬಿನ್ನಿಮಿಲ್, ಆಸ್ಟಿನ್‌ಟೌನ್, ಕೆಂಗೇರಿ ಮತ್ತು ಮೈಸೂರು ರಸ್ತೆಯಲ್ಲಿ ಒಟ್ಟು 1,388 ವಸತಿಗೃಹಗಳನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಕೆ.ಆರ್.ಪುರದಲ್ಲಿ 396 ವಸತಿಗೃಹಗಳನ್ನು 69.07 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ತಲಾ ಒಂದು ಘಟಕಕ್ಕೆ 15 ಲಕ್ಷ ರೂ. ಖರ್ಚು ಮಾಡಲಾಗುತ್ತಿದ್ದು, ಪ್ರತಿ ವಸತಿಗೃಹವು ಎರಡು ಕೊಠಡಿಗಳು, ಎರಡು ಶೌಚಾಲಯ, ಸೋಲಾರ್ ಹೀಟರ್, ಎಲ್‌ಇಡಿ ದೀಪಗಳು, ಮಳೆ ನೀರು ಕೊಯ್ಲು ಸೇರಿದಂತೆ ಎಲ್ಲ ಸೌಲಭ್ಯಗಳು ಒಳಗೊಂಡಿರುತ್ತದೆ ಎಂದು ಪರಮೇಶ್ವರ್ ತಿಳಿಸಿದರು.
ಆಧುನಿಕ ತಂತ್ರಜ್ಞಾನದ ಸಹಾಯದೊಂದಿಗೆ 18 ತಿಂಗಳಲ್ಲಿ ಈ ವಸತಿ ಸಮುಚ್ಚಯ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. 2016-17 ಸಾಲಿನಲ್ಲಿ ಐದು ಸಾವಿರ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಬಜೆಟ್‌ನಲ್ಲಿ ಅಗತ್ಯ ಅನುದಾನ ಒದಗಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಸಾಮಾಜಿಕ ಜಾಲತಾಣಗಳ ಮೂಲಕ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಇದರಿಂದಾಗಿ, ಸೈಬರ್ ಪೊಲೀಸ್ ಠಾಣೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಈಗಾಗಲೆ ಎಂಟು ಸಾವಿರ ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇನ್ನೂ ಎಂಟು ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕೆ.ಆರ್.ಪುರದಲ್ಲಿ ಸಂಚಾರ ಪೊಲೀಸ್ ಠಾಣೆಗೆ ಹೊಸ ಕಟ್ಟಡ, ಪೊಲೀಸ್ ವಸತಿ ಸಮುಚ್ಚಯಗಳ ಆವರಣದಲ್ಲಿ ಆಟದ ಮೈದಾನ, ಉದ್ಯಾನವನ ಹಾಗೂ ಪಿಯು ಕಾಲೇಜಿಗೆ ಪ್ರತ್ಯೇಕ ಬ್ಲಾಕ್ ನಿರ್ಮಾಣಕ್ಕೆ ಅಗತ್ಯ ಸಹಕಾರ ಹಾಗೂ ಅನುದಾನ ನೀಡುವಂತೆ ಶಾಸಕ ಬಿ.ಎ.ಬಸವರಾಜ ಹಾಗೂ ಪಾಲಿಕೆ ಸದಸ್ಯೆ ಪೂರ್ಣಿಮಾ ಶ್ರೀನಿವಾಸ್ ಮಾಡಿದ ಮನವಿಗೆ ಪರಮೇಶ್ವರ್ ಸಕಾರಾತ್ಮಕವಾಗಿ ಸ್ಪಂದಿಸಿದರು.
ರೈತರ ಮೇಲಿನ ಲಾಠಿ ಚಾರ್ಜ್‌ಗೆ ಸಮರ್ಥನೆ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರಾವರಿ ಸೌಲಭ್ಯಕ್ಕೆ ಆಗ್ರಹಿಸಿ ಇತ್ತೀಚೆಗೆ ರೈತರು ನಡೆಸಿದ ಪ್ರತಿಭಟನೆ ವೇಳೆ ಅವರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್‌ನ್ನು ಪರಮೇಶ್ವರ್ ಸಮರ್ಥಿಸಿಕೊಂಡರು.
ಪ್ರತಿಭಟನೆಯನ್ನು ಕೈಬಿಡುವಂತೆ ರೈತರಿಗೆ ದೇವನಹಳ್ಳಿ, ಯಲಹಂಕ ಬಳಿ ಪೊಲೀಸರು ಮನವಿ ಮಾಡಿದರು. ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಲ್ಲದೆ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದರು. ಇದರಿಂದಾಗಿ, ಅನಿವಾರ್ಯವಾಗಿ ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಅವರು ಸಮರ್ಥನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಿ.ಎ.ಬಸವರಾಜ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ.ಗರ್ಗ್,ಪೊಲೀಸ್ ಅಧಿಕಾರಿಗಳಾದ ಹರಿಶೇಖರನ್, ಸತೀಶ್‌ಕುಮಾರ್, ಡಾ.ಎಂ.ಎ.ಸಲೀಮ್, ಕೆ.ಆರ್.ಪುರ ಠಾಣಾ ಆರಕ್ಷಕ ನಿರೀಕ್ಷಕ ಸಂಜೀವರಾಯಪ್ಪ, ಬಿಬಿಎಂಪಿ ಸದಸ್ಯರಾದ ಎಂ.ಎನ್.ಶ್ರೀಕಾಂತ್, ಪೂರ್ಣಿಮಾ ಶ್ರೀನಿವಾಸ್, ಜಯಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

‘ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ಯಶಸ್ವಿ’
 ಬೆಂಗಳೂರು, ಮಾ.17: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ನುಡಿದಂತೆ ನಡೆಯುತ್ತಿದ್ದು ಜನರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯ ಸರಕಾರವು ಬಡವರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ವರ್ಗಗಳ ಕಲ್ಯಾಣಕ್ಕೆ ಆದ್ಯತೆ ನೀಡಿದೆ. ನಗರದಲ್ಲಿನ ತ್ಯಾಜ್ಯ ವಿಲೇವಾರಿ, ಮೂಲಭೂತ ಸೌಲಭ್ಯ, ಸಂಚಾರ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದಂತೆ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು.
ಕೆ.ಆರ್.ಪುರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಬಿ.ಎ.ಬಸವರಾಜ 428 ಕೋಟಿ ರೂ.ಗಳ ಅನುದಾನವನ್ನು ತಂದು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲೂ ಅವರು ಅತೀ ಹೆಚ್ಚು ಮತಗಳ ಅಂತರದಿಂದ ಗೆದ್ದು ಬರಬೇಕು ಎಂದು ಪರಮೇಶ್ವರ್ ಆಶಿಸಿದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯಾಬಲ 121ಇದೆ. 2018ರ ಚುನಾವಣೆಯಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೊಮ್ಮೆ ಸರಕಾರ ರಚನೆ ಮಾಡಬೇಕು ಎಂಬುದು ನಮ್ಮ ಗುರಿ ಎಂದು ಅವರು ಘೋಷಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News