×
Ad

‘ಎಸಿಬಿ ರಚನೆ’ ಬಗ್ಗೆ ಹೈಕಮಾಂಡ್ ವಿವರಣೆ ಕೇಳಿಲ್ಲ: ಮಲ್ಲಿಕಾರ್ಜುನ ಖರ್ಗೆ

Update: 2016-03-26 23:22 IST

ಬೆಂಗಳೂರು, ಮಾ. 26: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಯಾವುದೇ ವಿವರಣೆ ಕೇಳಿಲ್ಲ. ಎಬಿಸಿ ರಚನೆ ಬಗ್ಗೆ ಶಾಸಕರಿಗೆ ಅಸಮಾಧಾನವಿದ್ದರೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಪರಿಹರಿಸಿಕೊಳ್ಳಬೇಕು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಎಸಿಬಿ ರಚನೆಯಿಂದ ಲೋಕಾಯುಕ್ತ ಸಂಸ್ಥೆ ಅಧಿಕಾರ ಮೊಟಕಾಗುವುದಿಲ್ಲ, ಲೋಕಾಯುಕ್ತದ ಮೇಲೆ ದುಷ್ಪರಿಣಾಮ ಬೀರುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಅವರ ಮಾತನ್ನು ನಂಬಬೇಕು ಎಂದರು. ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಸಂಬಂಧ ವಿಪಕ್ಷಗಳು ವಿರೋಧ ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿದ ಮಲ್ಲಿಕಾರ್ಜುನ ಖರ್ಗೆ, ಎಸಿಬಿ ರಚನೆ ಸಂಬಂಧ ಯಾವುದೇ ರೀತಿಯ ಮಾಹಿತಿ ನೀಡುವಂತೆ ಹೈಕಮಾಂಡ್ ಕೋರಿಲ್ಲ. ಈ ಬಗ್ಗೆ ರಾಷ್ಟ್ರಮಟ್ಟದಲ್ಲಿ ಯಾವುದೇ ರೀತಿಯ ಚರ್ಚೆಯೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಲೋಕಾಯುಕ್ತ ಸಂಸ್ಥೆಯನ್ನು ಸದೃಢಗೊಳಿಸಲು ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸರಕಾರ ಸಿದ್ಧವಿದ್ದು, ಎಸಿಬಿ ರಚನೆಯಿಂದ ಲೋಕಾಯುಕ್ತ ಸಂಸ್ಥೆ ದುರ್ಬಲ ಆಗುವುದಿಲ್ಲ ಎಂದ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ. ಹೀಗಾಗಿ ನಾವೆಲ್ಲರೂ ಅವರ ಮಾತುಗಳನ್ನು ನಂಬಬೇಕು ಎಂದು ಖರ್ಗೆ ನುಡಿದರು.
15 ರಾಜ್ಯಗಳಲ್ಲಿ ಎಸಿಬಿ: ದೇಶದ ಹದಿನೈದು ರಾಜ್ಯಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಸ್ತಿತ್ವದಲ್ಲಿದೆ. ಆದರೆ,ಕರ್ನಾಟಕ ರಾಜ್ಯದಲ್ಲಿ ಮಾತ್ರ ಎಸಿಬಿ ರಚನೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಎಸಿಬಿ ರಚನೆ ಬಗ್ಗೆ ಗೊಂದಲಗಳಿದ್ದರೆ ಪ್ರಸಕ್ತ ಅಧಿವೇಶನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಿ ಎಂದು ಖರ್ಗೆ ಸಲಹೆ ನೀಡಿದರು.
ಪ್ರತಿಕ್ರಿಯೆಗೆ ನಕಾರ: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ, ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮಲ್ಲಿಕಾರ್ಜುನ ಖರ್ಗೆ, ಅವರು ಬಳಿ ಯಾವ ಮಾಹಿತಿ ಇದೆಯೋ ತನಗೆ ಗೊತ್ತಿಲ್ಲ ನಮ್ಮ ಪಕ್ಷ ಹಾಗೂ ಸರಕಾರದ ತೀರ್ಮಾನವನ್ನು ನಾವು ಒಪ್ಪಬೇಕು ಎಂದರು.
ರಾಜ್ಯದಲ್ಲಿನ ವಕ್ಫ್ ಆಸ್ತಿ ಕಬಳಿಕೆ ಸಂಬಂಧಪಟ್ಟ ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸುವ ಸಂಬಂಧದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನಿನ ಅನ್ವಯ ಸೂಕ್ತ ರೀತಿಯ ತೀರ್ಮಾನ ಆಗಲಿ ಎಂದು ಹೇಳಿದರು.

‘ಗದಗ-ವಾಡಿ(ಕಲಬುರಗಿ ಮಾರ್ಗ) ರೈಲ್ವೆ ಯೋಜನೆ, ರೈಲ್ವೆ ಮೇಲ್ಸೇತುವೆ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇನೆ. ಆಯವ್ಯಯದ ಮೇಲಿನ ಉತ್ತರದಲ್ಲಿ ಈ ಯೋಜನೆಗೆ ಅಗತ್ಯ ಹಣಕಾಸಿನ ನೆರವು ನೀಡಲು ಕೋರಿದ್ದೇನೆ’
ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ.

ಕಲಬುರಗಿ ಹೈಕೋರ್ಟ್ ಪೀಠ ವ್ಯಾಪ್ತಿಗೆ ಬಳ್ಳಾರಿ-ಕೊಪ್ಪಳ ಸೇರ್ಪಡೆಗೆ ಕೋರಿಕೆ
ಬೆಂಗಳೂರು, ಮಾ. 26: ಕಲಬುರಗಿ ಹೈಕೋರ್ಟ್ ಪೀಠದ ವ್ಯಾಪ್ತಿಗೆ ಕೊಪ್ಪಳ, ಬಳ್ಳಾರಿ ಜಿಲ್ಲೆಗಳನ್ನು ಸೇರಿಸುವುದು ಸೇರಿದಂತೆ ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿ ಯೋಜನೆಗಳ ಸಂಬಂಧ ಸಿಎಂ ಸಿದ್ದರಾಮಯ್ಯನವರೊಂದಿಗೆ ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಚರ್ಚಿಸಿದ್ದಾರೆ.
ಶನಿವಾರ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ಅವರು, ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ಕ್ಕೆ ಹೈದರಾಬಾದ್ ಕರ್ನಾಟಕ ಭಾಗದ ವ್ಯಕ್ತಿಯೊಬ್ಬರನ್ನು ನೇಮಿಸಬೇಕು. ನಾರಾಯಣಪುರ ಎಡದಂಡೆ ನಾಲೆ ಆಧುನೀಕರಣ ಮಾಡಬೇಕೆಂದು ಕೋರಿದ್ದಾರೆಂದು ತಿಳಿದು ಬಂದಿದೆ.
ಕಲಬುರಗಿ ವಿಶ್ವ ವಿದ್ಯಾನಿಲಯಕ್ಕೆ ಅಗತ್ಯ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹೈದರಾಬಾದ್ ಕರ್ನಾಟಕ ಭಾಗದ ರೈಲ್ವೆ ಯೋಜನೆಗಳಿಗೆ ಅಗತ್ಯ ಭೂಮಿಯನ್ನು ನೀಡಬೇಕು. ಅಲ್ಲದೆ, ಅಗತ್ಯ ಅನುದಾನ ಒದಗಿಸಬೇಕೆಂದು ಖರ್ಗೆ ಕೋರಿದ್ದು, ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News