ಪ್ರಧಾನಿ ಮಧ್ಯಸ್ಥಿಕೆಯಿಂದ ಸಮಸ್ಯೆ ಪರಿಹಾರ: ಸಿಎಂ
Update: 2016-03-28 22:21 IST
ಬೆಂಗಳೂರು, ಮಾ.28: ಕಳಸಾ ಬಂಡೂರಿ ಯೋಜನೆಯು ಅಂತರರಾಜ್ಯ ಜಲ ವಿವಾದವಾಗಿರುವುದರಿಂದ ಅದನ್ನು ನ್ಯಾಯಾಧೀಕರಣದ ಹೊರಗೆ ಇತ್ಯರ್ಥಪಡಿಸಿಕೊಳ್ಳಲು ಪ್ರಧಾನಮಂತ್ರಿ ಮಧ್ಯಸ್ಥಿಕೆ ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ನಿಯಮ 69ರಡಿಯಲ್ಲಿ ಜೆಡಿಎಸ್ ಸದಸ್ಯ ಎನ್.ಎಚ್.ಕೋನರೆಡ್ಡಿ ಮಂಡಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದ್ದಾಗ ಮಧ್ಯಪ್ರವೇಶಿಸಿ ಅವರು ಮಾತನಾಡಿದರು.
ರಾಜ್ಯವನ್ನು ಪ್ರತಿನಿಧಿಸುವಂತಹ ಬಿಜೆಪಿ ಸದಸ್ಯರು ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸುವ ನಿಟ್ಟಿನಲ್ಲಿ ಒತ್ತಡ ಹೇರಬೇಕು. ಅಂತರರಾಜ್ಯ ಜಲವಿವಾದವಾಗಿರುವು ದರಿಂದ ಮೂರು ರಾಜ್ಯಗಳ(ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ) ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.