×
Ad

ಜಿಲ್ಲಾ ಪಂಚಾಯತ್ ಮೀಸಲಾತಿ ಪಟ್ಟಿ ಸಿದ್ಧತೆಯಲ್ಲಿ ರಾಜಕೀಯ ಹಸ್ತಕ್ಷೇಪ

Update: 2016-04-07 23:43 IST

ಬೆಂಗಳೂರು, ಎ.7: ಜಿಲ್ಲಾ ಪಂಚಾಯತ್ ಅಧ್ಯಕ್ಷರು- ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಸಿದ್ಧಪಡಿಸುವ ಸಂದರ್ಭದಲ್ಲಿ ರಾಜಕೀಯ ಹಸ್ತಕ್ಷೇಪವಾಗಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ, ಈ ಸಂಬಂಧ ಬಹಿರಂಗ ಚರ್ಚೆಗೆ ಬರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ. ಪಾಟೀಲ್‌ರಿಗೆ ಆಹ್ವಾನ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೀಸಲಾತಿ ಪಟ್ಟಿ ಸಿದ್ಧತೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ. ಎಚ್.ಕೆ.ಪಾಟೀಲರು ಈ ಪಟ್ಟಿ ಸಮರ್ಪಕವಾಗಿದ್ದು, ಕಾನೂನು ಬದ್ಧವಾಗಿದೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಬಹಿರಂಗ ಚರ್ಚೆ ನಡೆಯಲಿ, ಸಚಿವರು ಯಾರ ಒತ್ತಡಕ್ಕೆ ಮಣಿದಿದ್ದಾರೆ. ಮೀಸಲು ನಿಗದಿಗೆ ಯಾವ ಮಾನದಂಡ ಅನುಸರಿಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ. ನನ್ನ ತಪ್ಪಿದ್ದರೆ ನಾನು ರಾಜೀನಾಮೆ ನೀಡುತ್ತೇನೆ. ಸಚಿವರ ರಾಜೀನಾಮೆಯನ್ನು ನಾನು ಕೇಳುವುದಿಲ್ಲ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ಎಚ್.ಕೆ.ಪಾಟೀಲರು ಸಾಕಷ್ಟು ಲೆಕ್ಕಾಚಾರ ಹಾಕಿ ಈ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ಗಾಂಧಿಗೆ ರಾಜ್ಯದ ಬಹುತೇಕ ಪಂಚಾಯತ್‌ಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ ಎಂದು ತೋರಿಸಲು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ ಈ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ ಎಂದು ರೇವಣ್ಣ ತಿಳಿಸಿದರು. ಹಾಸನ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ. ಎಚ್.ಕೆ.ಪಾಟೀಲ್ ಪ್ರತಿನಿಧಿಸುವಂತಹ ಗದಗ ಜಿಲ್ಲೆಯಲ್ಲಿ ಎಷ್ಟು ಬಾರಿ ಪರಿಶಿಷ್ಟ ಪಂಗಡಕ್ಕೆ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ ಎಂಬುದನ್ನು ಬಹಿರಂಗವಾಗಿ ತಿಳಿಸಲಿ ಎಂದು ಆಗ್ರಹಿಸಿದ ಅವರು, 1995ರಿಂದ ಈವರೆಗೆ ರೊಟೇಷನ್ ಪದ್ಧತಿಯಲ್ಲಿ ಯಾವ ಯಾವ ಸಮುದಾಯಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ಮೀಸಲಿಡಲಾಗಿದೆ ಎಂಬುದರ ಕುರಿತು ಮಾಹಿತಿ ನೀಡಿದರು.

ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿರುವ ಗದಗ, ಬೀದರ್, ಚಿತ್ರದುರ್ಗ, ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈ ವರ್ಗದವರಿಗೆ ಮೀಸಲಾತಿ ಲಭ್ಯವಾಗಿಲ್ಲ.ಹಾಸನದಲ್ಲಿ ಯಾವ ವರ್ಗದ ಜನ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬುದು ಸಚಿವರಿಗೆ ಗೊತ್ತಿಲ್ಲವೆ. ರಾಜಕೀಯ ಪ್ರೇರಿತವಾಗಿ ಹಾಸನ ಜಿಲ್ಲಾ ಪಂಚಾಯತ್‌ನಲ್ಲಿ ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿಲ್ಲ ಎಂದು ರೇವಣ್ಣ ಕಿಡಿಗಾರಿದರು.

ಜೆಡಿಎಸ್ ಪಕ್ಷವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಆದರೆ, ಅವರ ಕನಸು ನನಸಾಗುವುದಿಲ್ಲ. ಇದು ಕಾಂಗ್ರೆಸ್ ಆಡಳಿತದ ಕೊನೆಯ ಅಧ್ಯಾಯವಾಗಿದ್ದು, ಯುಗಾದಿ ಬಳಿಕ ಸರಕಾರದ ಒಂದೊಂದೇ ಹಗರಣಗಳನ್ನು ದಾಖಲೆ ಸಮೇತ ಜನತೆಯ ಮುಂದಿಡಲಾಗುವುದು ಎಂದು ಅವರು ಹೇಳಿದರು.

ಸರಕಾರದ ಈ ಕ್ರಮವನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ನಮ್ಮ ಮುಂದಿನ ನಡೆ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರೇವಣ್ಣ ತಿಳಿಸಿದರು.

ಎ.ಮಂಜು ವಿರುದ್ಧ ಪರೋಕ್ಷ ವಾಗ್ದಾಳಿ: ಹಾಸನ ಜಿಲ್ಲಾ ಪಂಚಾಯತ್‌ನಲ್ಲಿ ತಮ್ಮ ಮಗನಿಗೆ ಅಧಿಕಾರ ಕೊಡಿಸಲು ಜಿಲ್ಲಾ ಉಸ್ತುವಾರಿ ಸಚಿವರು ಕುದುರೆ ವ್ಯಾಪಾರಕ್ಕೆ ಇಳಿದಿದ್ದರು. ಪ್ರತಿಯೊಬ್ಬ ಜಿಪಂ ಸದಸ್ಯನಿಗೂ ತಲಾ ಒಂದು, ಎರಡು ಹಾಗೂ ಮೂರು ಕೋಟಿ ರೂ.ನೀಡುವ ಆಮಿಷವನ್ನು ಒಡ್ಡಿದ್ದರು ಎಂದು ರೇವಣ್ಣ ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News