ತೆರೆಮರೆಯಲ್ಲಿ ಬಿಜೆಪಿ-ಜೆಡಿಎಸ್ ಮೆತ್ರಿ?
ಶಿವಮೊಗ್ಗ, ಎ. 16: ಯಾರಿಗೂ ಸ್ಪಷ್ಟ ಬಹುಮತವಿಲ್ಲದೆ ಅತಂತ್ರ ಪರಿಸ್ಥಿತಿ ಮನೆ ಮಾಡಿರುವ ಶಿವಮೊಗ್ಗ ಜಿಪಂ ಆಡಳಿತ ಯಾರ ಪಾಲಾಗಲಿದೆ ಎಂಬುವುದೀಗ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ. ಅಧಿಕಾರದ ಗದ್ದುಗೆಯೇರಲು ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಅಧಿಕಾರದ ಗದ್ದುಗೆಯೇರುವವರ್ಯಾರು? ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಪರಿಣಮಿಸಿದೆ. ಸರಳ ಬಹುಮತಕ್ಕೆ ಒಂದು ಸ್ಥಾನದ ಕೊರತೆಯಿರುವ ಬಿಜೆಪಿ ಪಕ್ಷವು, ಅಧಿಕಾರದ ಗದ್ದುಗೆಯೇರಲು ತೀವ್ರ ಕಸರತ್ತು ನಡೆಸುತ್ತಿದೆ. ಈ ನಡುವೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ, ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನಿರ್ಧರಿಸಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಇದು ಜಿಲ್ಲಾ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಮಾತು ಕೇಳಿ ಬರುತ್ತಿತ್ತು. ಈ ಎರಡೂ ಪಕ್ಷಗಳ ಮುಖಂಡರೂ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಮೈತ್ರಿಯ ಪ್ರಶ್ನೆಯೇ ಇಲ್ಲವೆಂದು ಜೆಡಿಎಸ್ ಪಕ್ಷದ ಮುಖಂಡರು ಕೂಡ ಸ್ಪಷ್ಟಪಡಿಸಿದ್ದರು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಲು ಜೆಡಿಎಸ್ ನಿರ್ಧರಿಸಿದೆ ಎಂಬ ಮಾಹಿತಿ ಕೇಳಿಬಂದಿದೆ. ಇತ್ತೀಚೆಗೆ ಶಿವಮೊಗ್ಗ ನಗರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಿತ್ತ ವೇಳೆ ಜಿಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಬಗ್ಗೆ ಸ್ಥಳೀಯ ಜೆಡಿಎಸ್ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರಸ್ತುತ ಕಾಂಗ್ರೆಸ್ನೊಂದಿಗೆ ನಡೆಯುತ್ತಿರುವ ಮೈತ್ರಿ ಮಾತುಕತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಸೂಚಿಸಿದ್ದು, ಮುಂದಿನ ಸೂಚನೆಯವರೆಗೂ ಯಾವುದೇ ನಿರ್ಧಾರ ಕೈಗೊಳ್ಳದಂತೆ ಸಲಹೆ ನೀಡಿ ಹಿಂದಿರುಗಿದ್ದಾರೆ ಎಂದು ಜೆಡಿಎಸ್ ಪಕ್ಷದ ಮೂಲಗಳು ಹೇಳಿವೆ. ನಿರ್ಣಾಯಕ ಸ್ಥಾನದಲ್ಲಿರುವ ಪಕ್ಷೇತರ ಅಭ್ಯರ್ಥಿ ವೇದಾ ವಿಜಯಕುಮಾರ್ರವರು ತಮಗೆ ಅಧ್ಯಕ್ಷ ಸ್ಥಾನ ನೀಡುವ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸುವುದಾಗಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇದು ಮೂರು ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪಕ್ಷೇತರ ಅಭ್ಯರ್ಥಿಯ ಬಿಗಿಪಟ್ಟಿಗೆ ಮಣಿಯದಿರಲು ನಿರ್ಧರಿಸಿರುವ ಬಿಜೆಪಿ ಪಕ್ಷವು ಜೆಡಿಎಸ್ ಜೊತೆ ಮೈತ್ರಿಗೆ ಉತ್ಸುಕವಾಗಿದೆ ಎಂದು ಹೇಳಲಾಗಿದೆ. ಅಧ್ಯಕ್ಷ ಸ್ಥಾನವನ್ನು ತನ್ನ ಬಳಿಯಲ್ಲಿಟ್ಟುಕೊಂಡು ಉಪಾಧ್ಯಕ್ಷ ಸ್ಥಾನವನ್ನು ಜೆಡಿಎಸ್ಗೆ ನೀಡುವುದು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಸಮಾನವಾಗಿ ಹಂಚಿಕೊಳ್ಳುವ ಯೋಜನೆ ಬಿಜೆಪಿ ಮುಖಂಡರದ್ದಾಗಿದೆ. ಮತ್ತೊಂದೆಡೆ ಜೆಡಿಎಸ್ ನಾಯಕರು ಪಕ್ಷದ ವರಿಷ್ಠರ ಸೂಚನೆಯಂತೆ ನಡೆದುಕೊಳ್ಳಲು ನಿರ್ಧಾರಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪ್ರಯತ್ನ: ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ತನ್ನ ಪ್ರಯತ್ನ ಕೈಬಿಟ್ಟಿಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರದ ಗದ್ದುಗೆಯೇರುವ ತಂತ್ರಗಾರಿಕೆ ಮುಂದುವರಿಸಿದೆ. ಪಕ್ಷೇತರ ಅಭ್ಯರ್ಥಿ ವೇದಾರವರ ಪತಿ ವಿಜಯಕುಮಾರ್ರವರು ಪ್ರಸ್ತುತ ಹಾಪ್ಕಾಮ್ಸ್ ಅಧ್ಯಕ್ಷರಾಗಿದ್ದು, ಈ ಮೊದಲು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು. ಜಿಪಂ ಚುನಾವಣೆಯಲ್ಲಿ ಹಸೂಡಿ ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪತ್ನಿಯನ್ನು ಬಂಡಾಯವಾಗಿ ಚುನಾವಣಾ ಅಖಾಡಕ್ಕಿಳಿಸಿ ಗೆಲ್ಲಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದರು. ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದಿದ್ದ ಅಭ್ಯರ್ಥಿ ಪರಾಭವಗೊಂಡಿದ್ದರು. ವಿಜಯಕುಮಾರ್ರವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಈಗಾಗಲೇ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ನಡೆದಿದೆ ಎನ್ನಲಾಗಿದೆ. ಒಟ್ಟಾರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ- ಜೆಡಿಎಸ್ ನಡುವೆ ಮೈತ್ರಿ ಏರ್ಪಡಲಿದೆ ಎಂಬ ಮಾತು ಕೇಳಿಬರುತ್ತಿದೆ. ಮುಂದೇನಾಗಲಿದೆ ಎಂಬುವುದನ್ನು ಚುನಾವಣಾ ದಿನಾಂಕ ಪ್ರಕಟನೆಯ ನಂತರವಷ್ಟೆ ಸ್ಪಷ್ಟವಾಗಬೇಕಾಗಿದೆ.