×
Ad

ಅಂತರ್ಜಲ ಮಟ್ಟ ಕುಸಿಯದಂತೆ ಕಾರ್ಯಕ್ರಮ ರೂಪಿಸಿ: ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್

Update: 2016-04-21 22:08 IST

ಮಡಿಕೇರಿ, ಎ.21: ಜಿಲ್ಲೆಯಲ್ಲಿ ಭತ್ತ ಬೆಳೆಯುವ ಪ್ರದೇಶ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಶುಂಠಿ ಬೆಳೆ ಅಧಿಕವಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಭತ್ತದ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಬರಪೀಡಿತ ಪ್ರದೇಶಗಳ ಅಧ್ಯಯನ ಮತ್ತು ಬರ ನಿರ್ವಹಣೆ ಸಂಬಂಧ ಪರಿಶೀಲಿಸಲು ಸದ್ಯದಲ್ಲಿ ಸಚಿವ ಸಂಪುಟದ ಉಪ ಸಮಿತಿ ತಂಡವು ಜಿಲ್ಲೆಗೆ ಆಗಮಿಸಲಿದ್ದು, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ, ಮುಂದಿನ ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ಜಿಲ್ಲೆಗೆ ಪ್ರವೇಶಿಸುವ ಸಾಧ್ಯತೆಯಿದ್ದು, ರೈತರಿಗೆ ಬೇಕಿರುವ ಅಗತ್ಯ ರಸಗೊಬ್ಬರ ಹಾಗೂ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಬೇಕೆಂದರು. ಭತ್ತ ಬೆಳೆಯುವುದರಿಂದ ಹೆಚ್ಚಿನ ಲಾಭ ಸಿಗದಿರುವುದರಿಂದ ಭತ್ತ ಕೃಷಿಯತ್ತ ರೈತರು ವಿಮುಖರಾಗುತ್ತಿದ್ದಾರೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು ಅಭಿಪ್ರಾಯಪಟ್ಟರು. ಜಿಲ್ಲೆಯಲ್ಲಿ ನಿವೇಶನ, ಸ್ಮಶಾನ ಹಾಗೂ ಕಸ ವಿಲೇವಾರಿಗೆ ಭೂಮಿ ನೀಡುವ ಸಂಬಂಧ ಕಂದಾಯ ನಿರೀಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು. ಮೂಲ ನಿವಾಸಿ ಗಿರಿಜನರಿಗೆ ನಿವೇಶನ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ನೀಡಿದರು. ನದಿ ದಡದಲ್ಲಿ ಸ್ಮಶಾನಕ್ಕೆ ಅಥವಾ ಕಸ ವಿಲೇವಾರಿಗೆ ಅವಕಾಶ ನೀಡಬಾರದು. ಒಂದು ಸಾವಿರ ಜನಸಂಖ್ಯೆಗೆ ಕನಿಷ್ಠ ಅರ್ಧ ಎಕರೆ ಜಾಗವನ್ನಾದರೂ ಸ್ಮಶಾನಕ್ಕೆ ನೀಡಬೇಕು. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕಂದಾಯ ಅದಾಲತ್, ಪಿಂಚಣಿ ಅದಾಲತ್, ಸಾಮಾಜಿಕ ಭದ್ರತಾ ಯೋಜನೆಗಳು, ಆರ್‌ಟಿಸಿ ತಿದ್ದುಪಡಿ ಪ್ರಕರಣಗಳ ವಿಲೇವಾರಿ, ಪಡಶಾಲೆ ಯೋಜನೆ, ಪೋಡಿ ಪ್ರಕರಣ ಪ್ರಗತಿ, ಆಧಾರ್ ನೋಂದಣಿ ಪ್ರಗತಿ, ಸಕಾಲ ಯೋಜನೆ ಪ್ರಗತಿ, 94ಸಿ ಪ್ರಗತಿ ಮತ್ತಿತರ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಗಿರೀಶ್, ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ತಹಶೀಲ್ದಾರ್‌ಗಳಾದ ಕುಂಞಮ್ಮ, ಶಿವಪ್ಪ, ಮಹದೇವ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News