ಕೂಲಿ ಕಾರ್ಮಿಕರ ಕೆಲಸದ ಅವಧಿ ಮಾರ್ಪಾಡಿಗೆ ಸಚಿವ ಖಾದರ್ ಸೂಚನೆ
ಬೆಂಗಳೂರು, ಎ.26: ನಗರದಲ್ಲಿ ಇತ್ತೀಚೆಗೆ ಬಿಸಿಲಿನಿಂದ ಉಷ್ಣಾಂಶದಲ್ಲಿ ಸಾಕಷ್ಟು ಏರಿಕೆ ಆಗಿರುವುದರಿಂದ ಕೂಲಿ ಕಾರ್ಮಿಕರು ಕೆಲಸದ ಅವಧಿಯನ್ನು ಬೆಳಗ್ಗೆ 7ರಿಂದ 11 ಹಾಗೂ ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಮಾರ್ಪಡಿಸಿಕೊಳ್ಳಲು ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ದಿಮೆಗಳ ಮಾಲಕರಿಗೆ ಸಲಹೆ ನೀಡಿದ್ದಾರೆ.
ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತ ನಾಡಿದ ಅವರು, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕೂಲಿ ಕಾರ್ಮಿಕರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಕಟ್ಟಡದ ಮಾಲಕರಿಗೆ ಕೂಡಲೇ ಪಾಲಿಕೆಯ ಅಭಿಯಂತರು ಗಳ ಮುಖಾಂತರ ನೋಟಿಸ್ ಜಾರಿ ಮಾಡಲು ಸೂಚನೆ ನೀಡುವುದಾಗಿ ಅವರು ತಿಳಿಸಿದರು.
ನಗರದಲ್ಲಿ ಉಷ್ಣಾಂಶ ಹೆಚ್ಚಾಗಿರುವುದರಿಂದ ನಾಗರಿಕರು ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಶುದ್ಧವಾದ ನೀರು ಕುಡಿಯ ಬೇಕು. ಮಧ್ಯಾಹ್ನದ ಸಮಯದಲ್ಲಿ ರಕ್ಷಣೆಯಿಲ್ಲದೆ ಹೊರಗೆ ಓಡಾಡಬಾರದು. ಈ ರೀತಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಅಭಿಯಾನ ಕೈಗೊಳ್ಳ ಬೇಕೆಂದು ಪಾಲಿಕೆಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಅನಧಿಕೃತ ನೀರಿನ ಘಟಕಗಳು ವೈಜ್ಞಾನಿಕವಾಗಿ ಶುದ್ಧಿಕರಿಸದೆ ನಾಗರಿಕರಿಗೆ ನೀರು ಸರಬರಾಜು ಮಾಡುತ್ತಿರುವು ದರಿಂದ ಜನತೆಯ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಂಭವವಿದೆ. ಆದ್ದರಿಂದ ಅಂತಹ ಘಟಕದ ಮೇಲೆ ದಾಳಿ ನಡೆಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸಭೆಯಲ್ಲಿ ಬಿಬಿಎಂಪಿ ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ, ಉಪ ಮೇಯರ್ ಎಸ್.ಪಿ.ಹೇಮಲತಾ, ಆಡಳಿತ ಪಕ್ಷದ ನಾಯಕ ಆರ್.ಎಸ್.ಸತ್ಯನಾರಾಯಣ, ಪಾಲಿಕೆಯ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
‘ಬೆಂಗಳೂರಿನಲ್ಲಿ ಬೀಡುಬಿಟ್ಟ ಸಿಬ್ಬಂದಿ ವರ್ಗಾವಣೆ’
ಬೆಂಗಳೂರು, ಎ. 26: ಆರೋಗ್ಯ ಇಲಾಖೆಯಲ್ಲಿ ಹತ್ತು-ಹದಿನೈದು ವರ್ಷಗಳಿಂದ ಬೆಂಗಳೂರು ನಗರ ಸೇರಿದಂತೆ ಒಂದೇ ಕಡೆ ಬೀಡು ಬಿಟ್ಟಿರುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿರುವ 13 ಸಾವಿರ ಮಂದಿ ಸಿಬ್ಬಂದಿಯನ್ನು ಎತ್ತಂಗಡಿ ಮಾಡಿ, ಆ ಸ್ಥಾನಗಳಿಗೆ ಬೇರೆ ಭಾಗಗಳಿಂದ ಬೆಂಗಳೂರಿಗೆ ಬರುವವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಉದ್ದೇಶಿತ ಈ ವರ್ಗಾವಣೆ ಪ್ರಕ್ರಿಯೆ ಮೇ ಅಂತ್ಯದೊಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಅತ್ಯಂತ ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು ಎಂದ ಅವರು, ಆರೋಗ್ಯ ಇಲಾಖೆಗೆ ಹೊಸ ಕಾಯಕಲ್ಪ ನೀಡಲಾಗುವುದು ಎಂದರು.
ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಮಾರು 2012 ಅಧಿಕಾರಿ ಮತ್ತು ನೌಕರರಿಗೆ ಭಡ್ತಿ ನೀಡಲಾಗಿದ್ದು, ಈ ಪೈಕಿ 803 ಕಿರಿಯ ಮಹಿಳಾ ಸಹಾಯಕಿಯರಿಗೆ ಹಾಗೂ 610ಕಿರಿಯ ಪುರುಷ ಸಹಾಯಕರಿಗೆ ಹಿರಿಯ ಸಹಾಯಕರ ಹುದ್ದೆಗೆ ಭಡ್ತಿ ನೀಡಲಾಗಿದೆ ಎಂದ ಅವರು, ಉಳಿದ 1200 ವಿವಿಧ ಹಂತದ ಹುದ್ದೆಗಳಿಗೆ ಇದೆ ತಿಂಗಳ ಅಂತ್ಯದೊಳಗೆ ಮುಂಭಡ್ತಿ ನೀಡಲಾಗುವುದು ಎಂದು ತಿಳಿಸಿದರು.
ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಈವರೆಗೆ 672ತಜ್ಞ ವೈದ್ಯರು, 243 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಗಳು ಹಾಗೂ 75ದಂತ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ, ಮೇ ಅಂತ್ಯದೊಳಗೆ ಲೋಕಸೇವಾ ಆಯೋಗವು ಕಾಯ್ದಿರಿಸಿದ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ತಿಳಿಸಿದರು.
ಮೊದಲ ಹಂತದಲ್ಲಿ ತಜ್ಞ ಹಾಗೂ ವೈದ್ಯರ ನೇಮಕ ಪ್ರಕ್ರಿಯೆ ಮುಗಿದಿದ್ದು, ಖಾಲಿ ಉಳಿದಿರುವ ಹುದ್ದೆಗೆ 2ನೆ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದ ಅವರು, ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಮಕ್ಕಳು, ಪ್ರಸೂತಿ ತಜ್ಞರು ಹಾಗೂ ಅರವಳಿಕೆ ತಜ್ಞರನ್ನು ಗುತ್ತಿಗೆ ಹಾಗೂ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಸೃಷ್ಟಿಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಆರೋಗ್ಯದ ಬಗ್ಗೆ ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ
ಬೆಂಗಳೂರು, ಎ.26: ತೀವ್ರ ಸ್ವರೂಪದ ಬಿಸಿಲಿನ ತಾಪಮಾನ ಏರಿಕೆ ಹಾಗೂ ಮಳೆಯ ಅಭಾವದ ಹಿನ್ನೆಲೆಯಲ್ಲಿ ಆರೋಗ್ಯ ಸಂಬಂಧ ಸಮಸ್ಯೆಗಳು ಉಲ್ಬಣಿಸುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಮನವಿ ಮಾಡಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಧ್ಯಾಹ್ನದ ಬಿಸಿಲಿನ ತಾಪಮಾನದಿಂದ ಸಾರ್ವಜನಿಕರು ಸಾಧ್ಯವಾದಷ್ಟು ದೂರವಿರುವುದು ಉತ್ತಮ. ಸಡಿಲ-ತೆಳುಬಣ್ಣದ ಹತ್ತಿಯ ಬಟ್ಟೆ ಧರಿಸಿ, ಯಥೇಚ್ಛವಾಗಿ ನೀರನ್ನು ಸೇವಿಸಿ ಎಂದು ಸಲಹೆ ನೀಡಿದ್ದಾರೆ.
ಜಾತ್ರೆಗಳಲ್ಲಿ ಕಡ್ಡಾಯವಾಗಿ ತಾತ್ಕಾಲಿಕ ಕ್ಲಿನಿಕ್ ಸ್ಥಾಪನೆ, ಆಂಬುಲೆನ್ಸ್ ಮತ್ತು ಬಳಸುವ ನೀರನ್ನು ಪರೀಕ್ಷೆಗೊಳಪಡಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು, ಕಟ್ಟಡ ಕಾರ್ಮಿಕರು ಮತ್ತು ಮಕ್ಕಳಿಗೆ ಬಿಸಿಲಿನಿಂದ ಉಂಟಾಗುವ ಸಮಸ್ಯೆ ತಪ್ಪಿಸಲು ಬಿಬಿಎಂಪಿ ಜತೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೇಸಿಗೆ ಕಾಲ ಮುಗಿಯುವವರೆಗೆ ವೃದ್ಧರು ಮತ್ತು ಮಕ್ಕಳ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಜೊತೆಗೆ ಚರ್ಮಕೆಂಪು ಬಣ್ಣ ಕಂಡುಬಂದಲ್ಲಿ, ಬೆವರಿನ ಪ್ರಮಾಣ ಕಡಿಮೆಯಾದಲ್ಲಿ, ದೇಹದಲ್ಲಿ ಉಷ್ಣತೆ ಜಾಸ್ತಿಯಾದರೆ ಹಾಗೂ ದೀರ್ಘವಾದ ಉಸಿರಾಟ ತೊಂದರೆ ಕಂಡು ಬಂದಲ್ಲಿ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ನಿರ್ದೇಶನ: ಮೂರು ಲಕ್ಷ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, 50 ಸಾವಿರ ಮಾದರಿಗಳಲ್ಲಿ ಸಮಸ್ಯೆಯಿರುವುದು ಕಂಡುಬಂದಿದೆ. ಚಿತ್ರದುರ್ಗ, ದಾವಣಗೆರೆ, ಮೈಸೂರು, ಕೋಲಾರ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಶುದ್ಧ ಕುಡಿಯುವ ನೀರು ಒದಗಿಸಲು ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.
ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಹಣ್ಣುಗಳ ಪರೀಕ್ಷೆಗೆ ಸೂಚಿಸಲಾಗಿದೆ. ಜತೆಗೆ ನೀರಿನ ಕೊರತೆ ಉಂಟಾಗಿರುವ ಪ್ರದೇಶಗಳಿಗೆ ಮತ್ತು ಆಸ್ಪತ್ರೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ಇಲಾಖಾ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಖಾದರ್ ವಿವರ ನೀಡಿದರು.