×
Ad

ನಿತ್ಯ ಕುಡಿಯುವ ನೀರು ಪೂರೆಸಲು ಕ್ರಮಕೈಗೊಳ್ಳುವಂತೆ ಸಚಿವ ವಿನಯ ಕುಮಾರ್ ಸೊರಕೆನಿರ್ದೇಶನ

Update: 2016-04-28 22:07 IST

ಮಡಿಕೇರಿ,ಎ.28: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಪ್ರತಿನಿತ್ಯ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಇಂಜಿನಿಯರ್‌ಗಳ ಜೊತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಸಮಸ್ಯೆ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು. ಈಗಾಗಲೇ ನಗರ ಮತ್ತು ಪಟ್ಟಣ ಪಂಚಾಯತ್‌ಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ಅನುದಾನ ಬೇಕಿದ್ದಲ್ಲಿ ಬಿಡುಗಡೆ ಮಾಡಲಾಗುವುದು, ಆದರೆ ಕೊಟ್ಟಿರುವ ಅನುದಾನವನ್ನು ತುರ್ತಾಗಿ ಖರ್ಚು ಮಾಡಲು ಏನು ತೊಂದರೆ ಎಂದು ಸಚಿವರು ಪ್ರಶ್ನಿಸಿದರು.

ಹೊಸ ಬೋರ್‌ವೆಲ್‌ಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವುದು. ಖಾಸಗಿ ಬೋರ್‌ವೆಲ್‌ಗಳು ಇದ್ದಲ್ಲಿ ಅವುಗಳನ್ನು ಬಾಡಿಗೆಗೆ ಉಪಯೋಗಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕು. ಒಟ್ಟಾರೆ ಕುಡಿಯುವ ನೀರಿನ ಹಾಹಾಕಾರ ಉಂಟಾಗದಂತೆ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದರು. ನಗರೋತ್ಥಾನ ಅನುಷ್ಠಾನ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಕಾಮಗಾರಿಗಳನ್ನು ಹಮ್ಮಿಕೊಳ್ಳಬಹುದಾಗಿದೆ. ಎಸ್.ಎಫ್.ಸಿ. 13 ನೆ ಹಣಕಾಸು, ಶೇ.24 ರಷ್ಟು ಅನುದಾನ ಹೀಗೆ ಹಲವು ಯೋಜನೆಗಳ ಅನುದಾನವನ್ನು ಸಮರ್ಪಕವಾಗಿ ವಿನಿಯೋಗ ಮಾಡಬೇಕು. ಒಂದು ಕೋಟಿ ರೂ.ವರೆಗಿನ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರಿಗೆ ಅನುಮತಿ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವರು ಸಲಹೆ ನೀಡಿದರು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಸತಿ ಕಲ್ಪಿಸುವ ಸಂಬಂಧ ಅಂಬೇಡ್ಕರ್ ವಸತಿ ಯೋಜನೆ ಹಾಗೂ ವಾಜಪೇಯಿ ವಸತಿ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು. ಇದರಲ್ಲಿ ಪರಿಶಿಷ್ಟರಿಗೆ ಹೆಚ್ಚಿನ ಅನುದಾನ ದೊರೆಯಲಿದೆ.

ಮಡಿಕೇರಿ ನಗರಸಭೆಗೆ ಕಳೆದ ಮೂರು ವರ್ಷಗಳಲ್ಲಿ ಸರಕಾರ 15 ಕೋಟಿ ರೂ.ಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಗರ, ಪಟ್ಟಣ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಸಚಿವರು ಹೇಳಿದರು.

ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶೇ. 75 ರಷ್ಟು ಅನುದಾನ ಮಡಿಕೇರಿ ನಗರದಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಸಂಬಂಧ ಶೇ.75 ರಷ್ಟು ಅನುದಾನವನ್ನು ಒದಗಿಸಲಾಗುವುದು. ಖಾಸಗಿ ಬಸ್ ನಿಲ್ದಾಣ ಎಲ್ಲಿ ನಿರ್ಮಾಣ ಮಾಡಬೇಕು ಎಂಬ ಬಗ್ಗೆ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಸ್ಥಳ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಮಾರುಕಟ್ಟೆ ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದು, ಇದನ್ನು ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಘಟಕ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರು ಮಾತನಾಡಿ, ಮಡಿಕೇರಿ ನಗರಕ್ಕೆ ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ವಾಹನ ನಿಲುಗಡೆಗೆ ತುಂಬಾ ತೊಂದರೆಯಾಗಿದೆ. ಆದ್ದರಿಂದ ಬಹು ವಾಹನ ನಿಲುಗಡೆ ಮಾಡಲು ಉದ್ದೇಶಿಸಲಾಗಿದ್ದು, (ಮಲ್ಟಿ ಲೆವೆಲ್ ಪಾರ್ಕಿಂಗ್) ಇದಕ್ಕಾಗಿ ಅನುಮತಿ ನೀಡುವಂತೆ ಅವರು ಮನವಿ ಮಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೂರಯ್ಯ ಅಬ್ರಾರ್, ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಚಂದ್ರಶೇಖರ, ಪೌರಾಯುಕ್ತರಾದ ಬಿ.ಬಿ.ಪುಷ್ಪಾವತಿ ಮಾತನಾಡಿದರು.

ನಗರಸಭೆ ಅಧ್ಯಕ್ಷರಾದ ಬಂಗೇರ, ವೀರಾಜಪೇಟೆ ಪಪಂ ಅಧ್ಯಕ್ಷರಾದ ಕೂತಂಡ ಸಚಿನ್, ಸೋಮವಾರಪೇಟೆ ಪಪಂಅಧ್ಯಕ್ಷರಾದ ವಿಜಯಲಕ್ಷ್ಮೀ, ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಎಂ.ರವಿಕುಮಾರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಮನೋಹರ್, ಪಪಂ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್, ಕೃಷ್ಣೇಗೌಡ, ವೀರಾಜಪೇಟೆ ಪಪಂ ಉಪಾಧ್ಯಕ್ಷರಾದ ತಸ್ಲೀಮಾ ಅಕ್ತರ್ ಹಲವು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News